ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟ ಮಹಿಳೆಗೆ ಸೋಂಕು ತಗಲಿಲ್ಲ: ಚಾಮರಾಜನಗರ ಜಿಲ್ಲಾಧಿಕಾರಿ

ಚಾಮರಾಜನಗರ, ಜೂ.22: ಕೊರೋನ ಶಂಕೆ ಮೇರೆಗೆ ಚಾಮರಾಜ ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿರುವ ಮಹಿಳೆಗೆ ಕೊರೋನ ಸೋಂಕು ತಗುಲಿರಲಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸ್ಪಷ್ಟಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಬೆಳಗ್ಗೆ ಸಾವನ್ನಪ್ಪಿದ ಮಹಿಳೆಯ ಕೊರೋನ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ತೀವ್ರ ಉಸಿರಾಟದ ತೊಂದರೆಯ ಹಿನ್ನೆಲೆ ಆ ಮಹಿಳೆ ಮೃತಪಟ್ಟಿದ್ದಾರೆ. ಈ ಕುರಿತು ಯಾವುದೇ ಗೊಂದಲ, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೊಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರದ ಆದೇಶದಂತೆ ಸೂಚಿಸಲಾಗಿದೆ, ಹಾಗೂ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಸೊಂಕು ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಚಾಮರಾಜನಗರ ಜಿಲ್ಲೆಯ ಜನತೆ ಕೊರೋನ ಬಗ್ಗೆ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಎಂದು ಹೇಳಿರುವ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ, ಈಗಾಗಲೇ ಚಾಮರಾಜನಗರ ಜಿಲ್ಲೆಯಲ್ಲಿ ಕೊರೋನ ವೈರಸ್ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ವಹಿಸಿದ್ದು, ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ಗಳಲ್ಲಿ ಆರೋಗ್ಯ ಇಲಾಖೆ ಉತ್ತಮ ಚಿಕಿತ್ಸೆ ನೀಡಲು ಬದ್ದವಾಗಿದೆ ಎಂದು ಇದೇ ವೇಳೆ ಹೇಳಿದರು.







