ಜೂ.27ರಿಂದ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಆರೆಂಜ್ ಅಲರ್ಟ್

ಉಡುಪಿ, ಜೂ.26: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆ ಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಜೂ.27ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ನ್ನು ಘೋಷಿಸಲಾಗಿದೆ. ಜಿಲ್ಲೆಯಲ್ಲಿ 100ರಿಂದ 115ಮಿ.ಮೀ. ಮಳೆ ಸುರಿಯುವ ಸಾಧ್ಯತೆ ಇದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಜಿಲ್ಲೆಯ ಜನತೆಗೆ ಈ ಕೆಳಗಿನ ಸೂಚನೆಗಳನ್ನು ನೀಡಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಸಾರ್ವಜನಿಕರು ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳದಲ್ಲಿರುವ ಸೂಚಿಸಲಾಗಿದೆ.
ಅಲ್ಲದೇ ಜಿಲ್ಲೆಯ ಸಾರ್ವಜನಿಕರು ತುರ್ತು ಸೇವೆಗೆ ಶುಲ್ಕರಹಿತ 1077 ಹಾಗೂ ದೂರವಾಣಿ ಸಂಖ್ಯೆ: 0820-2574802ನ್ನು ಸಂಪರ್ಕಿಸು ವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







