ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ರಾಮ ಮಂದಿರಕ್ಕೆ ಪ್ರಧಾನಿಯಿಂದ ಶಿಲಾನ್ಯಾಸ
ಹೊಸದಿಲ್ಲಿ, ಜು. 22: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಕೊರೋನ ಸೊಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸಂದರ್ಭ ಗರಿಷ್ಠ ಸುರಕ್ಷಿತ ಅಂತರ ಕಾಯ್ದುಕೊಳ್ಳಲು ಶಿಲಾನ್ಯಾಸ ಕಾರ್ಯಕ್ರಮದಲ್ಲಿ 150 ಆಹ್ವಾನಿತರು ಸೇರಿದಂತೆ 200ಕ್ಕಿಂತ ಅಧಿಕ ಜನರು ಪಾಲ್ಗೊಳ್ಳದಿರಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನಿರ್ಧರಿಸಿದೆ. ಶಿಲಾನ್ಯಾಸ ಕಾರ್ಯಕ್ರಮದಲ್ಲಿ 150 ಮಂದಿ ಆಹ್ವಾನಿತರು ಸೇರಿದಂತೆ 200ಕ್ಕಿಂತ ಅಧಿಕ ಜನರು ಪಾಲ್ಗೊಳ್ಳದಿರಲು ನಾವು ನಿರ್ಧರಿಸಿದ್ದೇವೆ ಎಂದು ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರದ ಕೋಶಾಧಿಕಾರಿ ಸ್ವಾಮಿ ಗೋವಿಂದ ದೇವ್ ಗಿರಿ ಅವರು ಪುಣೆಯಲ್ಲಿ ಬುಧವಾರ ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಮುನ್ನ ಪ್ರಧಾನಿ ಮೋದಿ ಅವರು ಅಯೋಧ್ಯೆಯ ದೇವಾಲಯದಲ್ಲಿರುವ ರಾಮನಿಗೆ ಹಾಗೂ ಹನುಮಾನ್ ಗೃಹಿ ದೇವಾಲಯದಲ್ಲಿರುವ ಹನುಮಾನ್ಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ ಎಂದು ಸ್ವಾಮಿ ಗೋವಿಂದ ದೇವ್ ಗಿರಿ ಅವರು ತಿಳಿಸಿದ್ದಾರೆ.