ಮುಂದಿನ ವರ್ಷ 30 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂ. ಕೃಷಿ ಸಾಲ: ಸಚಿವ ಸೋಮಶೇಖರ್

ಬೆಂಗಳೂರು, ಜು. 26: ರಾಜ್ಯ ಸರಕಾರಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ವತಿಯಿಂದ ಹೊರತಂದಿರುವ 'ಸಹಕಾರದ ಪ್ರಗತಿ-2020' ಸಾಧನೆಗಳ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ನಿವಾಸ ಕಾವೇರಿಯಲ್ಲಿ ಲೋಕಾರ್ಪಣೆ ಮಾಡಿದರು.
ರವಿವಾರ ಸಿಎಂ ತಮ್ಮ ನಿವಾಸ ಕಾವೇರಿಯಲ್ಲಿ ಸಾಧನೆಗಳ ಕಿರುಹೊತ್ತಿಗೆ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಮುಂದಿನ ವರ್ಷ 30 ಲಕ್ಷ ಮಂದಿ ರೈತರಿಗೆ 20 ಸಾವಿರ ಕೋಟಿ ರೂ.ಕೃಷಿ ಸಾಲವನ್ನು ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಯಡಿಯೂರಪ್ಪ ಸೂಚಿಸಿದ್ದಾರೆ. ಅಲ್ಲದೆ, ರಾಜ್ಯದ ರೈತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ನಿರ್ದೇಶನ ನೀಡಿದ್ದಾರೆ ಎಂದರು.
ಪ್ರಸಕ್ತ ಸಾಲಿನಲ್ಲಿ ರೈತರಿಗೆ 14,500 ಕೋಟಿ ರೂ. ಕೃಷಿ ಸಾಲ ನೀಡುವ ಗುರಿ ಇದೆ. ಈಗಾಗಲೇ 8,50,000 ರೈತರಿಗೆ 5,600 ಕೋಟಿ ರೂ.ಕೃಷಿ ಸಾಲ ವಿತರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ಕೃಷಿ ಚಟುವಟಿಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ಸೋಮಶೇಖರ್ ಇದೇ ವೇಳೆ ವಿವರ ನೀಡಿದರು.
ಶ್ಲಾಘನೆ: ಒಂದು ವರ್ಷದ ಸಾಧನೆ ಜೊತೆಗೆ ಸಹಕಾರ ಇಲಾಖೆಯಿಂದ 3 ತಿಂಗಳ ಅವಧಿಗೆ ಏನು ಸಾಧನೆ ಮಾಡಿದ್ದೇನೆ ಎಂಬುದರ ಕಿರುಹೊತ್ತಿಗೆಯನ್ನು ಹೊರತಂದಿದ್ದು, ಅದನ್ನು ಮುಖ್ಯಮಂತ್ರಿ ಬಿಡುಗಡೆಗೊಳಿಸಿದ್ದಾರೆ. ಅಲ್ಲದೆ, ಸಚಿವನಾಗಿ ನಾನು ನಿರ್ವಹಿಸಿದ ಜವಾಬ್ದಾರಿ ಬಗ್ಗೆ ಸಿಎಂ ಮೆಚ್ಚುಗೆ ಸೂಚಿಸಿದ್ದಾರೆ. ಇನ್ನು ಮುಂದೆಯೂ ಇದೇ ಮಾದರಿಯಲ್ಲಿ ಕಾರ್ಯನಿರ್ವಹಣೆ ಮಾಡಿ ಎಂದು ಸಲಹೆ ಮಾಡಿದ್ದಾರೆ ಎಂದರು.
ಈಗಾಗಲೇ 25 ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಅರಿತಿದ್ದೇನೆ. ಪ್ರತಿ ಭೇಟಿ ವೇಳೆಯೂ ರೈತರ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಪ್ರಸಕ್ತ ಬಾರಿ ರೈತರಿಗೆ ಮಧ್ಯಮಾವಧಿ, ಅಲ್ಪಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲವಾಗಿ 14,500 ಕೋಟಿ ರೂ.ಸಾಲ ನೀಡುವಂತೆ ಸಿಎಂ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಚಾಲನೆ ನೀಡಲಾಗಿದ್ದು, ಈಗಾಗಲೇ 8,50,000 ರೈತರಿಗೆ ರೂ.5,600 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ ಎಂದರು.
ಕೊರೋನ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನಂತೆ 12.75 ಕೋಟಿ ರೂ.ಗಳನ್ನು ಇಲಾಖೆ ವತಿಯಿಂದ ನೀಡಲಾಗುತ್ತಿದ್ದು, ಈಗಾಗಲೇ 32 ಸಾವಿರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ನೀಡಲಾಗಿದೆ. ಉಳಿದ 10 ಸಾವಿರ ಆಶಾ ಕಾರ್ಯಕರ್ತೆಯರಿಗೆ ಶೀಘ್ರದಲ್ಲಿಯೇ ನೀಡಲಾಗುವುದು ಎಂದು ಸಚಿವರು ತಿಳಿಸಿದರು. ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಇನ್ನಿತರರು ಈ ವೇಳೆ ಹಾಜರಿದ್ದರು.
ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಾಗಲೆಲ್ಲ ಸವಾಲುಗಳೇ ಬರುತ್ತವೆ. ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಳ್ಳಲು 5ಲಕ್ಷ ರೂ.ಗಳನ್ನು ನಮ್ಮ ಸರಕಾರ ನೀಡಿದೆ. ಇದರ ಜೊತೆಗೆ ಕಾರ್ಮಿಕರಿಗೆ, ಬಡವರಿಗೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿದ್ದಾರೆ'
-ಆರ್.ಅಶೋಕ್, ಕಂದಾಯ ಸಚಿವ







