ಕೋವಿಡ್ ಚಿಕಿತ್ಸೆ: ಮೂಲಸೌಕರ್ಯ ಒದಗಿಸುವಲ್ಲಿ ರಾಜ್ಯದ ವೈದ್ಯಕೀಯ ಕಾಲೇಜುಗಳು ಮುಂಚೂಣಿಯಲ್ಲಿ- ಸಚಿವ ಸುಧಾಕರ್
ಬೆಂಗಳೂರು,ಜು.27: ಆರ್ಥಿಕ ಸಂಕಷ್ಟದ ನಡುವೆಯೂ ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನವನ್ನು ಶೇ.40-45 ಹೆಚ್ಚಿಸುವ ಮೂಲಕ 5 ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಬೇಡಿಕೆಯನ್ನು ಪೂರೈಸಲಾಗಿದೆ. ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧನ್ಯವಾದಗಳು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
ಈ ಸಂಬಂಧ #1YearOfBSYGovt #ಸವಾಲುಗಳವರ್ಷಪರಿಹಾರದಸ್ಪರ್ಶ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಸರಣಿ ಟ್ವೀಟ್ ಮಾಡಿರುವ ಅವರು, ಕೋವಿಡ್ ಸಂಕಷ್ಟದಿಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಹಲವಾರು ರಾಜ್ಯಗಳು ವೈದ್ಯರ ವೇತನ ಕಡಿತಗೊಳಿಸಿರುವ ಸಂದರ್ಭದಲ್ಲಿ 7ನೇ ವೇತನ ಆಯೋಗ ಅನ್ವಯ ವೈದ್ಯಕೀಯ ಬೋಧಕ ಸಿಬ್ಬಂದಿಯ ವೇತನ ಪರಿಷ್ಕರಣೆ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
"ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸುವಲ್ಲಿ ರಾಜ್ಯದ ಸರ್ಕಾರಿ & ಖಾಸಗಿ ವೈದ್ಯಕೀಯ ಕಾಲೇಜುಗಳು ಮುಂಚೂಣಿಯಲ್ಲಿವೆ. ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಲ್ಲಿ ಲಭ್ಯವಿರುವ ಸುಮಾರು 10,000 ಬೆಡ್ ಗಳಲ್ಲಿ 5,000 ಬೆಡ್ ಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಲಾಗಿದೆ"
"ಕೋವಿಡ್ ನಿಯಂತ್ರಣಾ ಕಾರ್ಯಕ್ಕೆ ಅಗತ್ಯವಿರುವ ಮಾನವ ಸಂಪನ್ಮೂಲ ಒದಗಿಸುವಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಮಹತ್ವದ ಪಾತ್ರ ವಹಿಸಿದೆ. ಸುಮಾರು 2,000 ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಸೋಂಕಿತರ ಚಿಕಿತ್ಸೆಗೆ ಮತ್ತು 2,000 ಎಂಬಿಬಿಎಸ್, ನರ್ಸಿಂಗ್ ವಿದ್ಯಾಥಿಗಳನ್ನು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಬಳಸಿಕೊಳ್ಳಲಾಗುತ್ತಿದೆ" ಎಂದು ಮಾಹಿತಿ ನೀಡಿದ್ದಾರೆ.
ಹೆಚ್ಚು ಕೋವಿಡ್ ಟೆಸ್ಟ್ ಮಾಡಿದರಷ್ಟೇ ಕೊರೊನಾ ನಿಯಂತ್ರಣ ಸುಲಭವಾಗುತ್ತದೆ. ರಾಜ್ಯದಲ್ಲಿ ಪ್ರತಿದಿನ 30-40 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ಕೆಲವರು ತಪ್ಪು ವಿಳಾಸ, ತಪ್ಪು ಮೊಬೈಲ್ ನಂಬರ್ ಕೊಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಡ್ಡಾಯವಾಗಿ ಆಧಾರ್, ಐಡಿ ಕಾರ್ಡ್ ತೋರಿಸಿ OTP ಬಂದ ಮೇಲೆ ಟೆಸ್ಟ್ ಮಾಡಲು ಸೂಚನೆ ನೀಡಿದ್ದೇನೆ
-ಸಚಿವ ಸುಧಾಕರ್, ಟ್ವೀಟ್