ರಾಜ್ಯ ಸರಕಾರದ ಸಾಧನೆಗಳನ್ನೊಳಗೊಂಡ ಕಿರುಹೊತ್ತಿಗೆ ಬಿಡುಗಡೆ
ಉಡುಪಿ ಜು.27: ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಬಾಂಗಣದಲ್ಲಿ ಸೋಮವಾರ ನಡೆದ ರಾಜ್ಯ ಸರಕಾರ ಒಂದು ವರ್ಷ ಪೂರೈಸಿದ ನೇರಪ್ರಸಾರ ಕಾರ್ಯಕ್ರಮದಲ್ಲಿ ಸರಕಾರದ ಒಂದು ವರ್ಷದ ಸಾಧನೆಗಳನ್ನೊಳಗೊಂಡ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರ ತಂದಿರುವ ಕಿರುಹೊತ್ತಿಗೆ ‘ಸವಾಲುಗಳ ಒಂದು ವರ್ಷ- ಪರಿಹಾರದ ಸ್ಪರ್ಶ’ವನ್ನು ಬಿಡುಗಡೆಗೊಳಿಸಲಾಯಿತು.
ಕಿರುಹೊತ್ತಿಗೆಯನ್ನು ಉಡುಪಿ ಶಾಸಕ ರಘುಪತಿ ಭಟ್, ಜನಪದ ವಿಶೇಷ ಸಂಚಿಕೆಯನ್ನು ಕಾಪು ಶಾಸಕ ಲಾಲಾಜಿ.ಆರ್.ಮೆಂಡನ್ ಹಾಗೂ ಮಾರ್ಚ್ ಆಪ್ ಕರ್ನಾಟಕ ವಿಶೇಷ ಸಂಚಿಕೆಯನ್ನು ಜಿಪಂ ಅಧ್ಯಕ್ಷ ದಿನಕರ ಬಾಬು ಬಿಡುಗಡೆಗೊಳಿಸಿದರು. ಇದೇ ವೇಳೆಯಲ್ಲಿ ಸರಕಾರದ ಸಾಧನೆಗಳ ಕುರಿತ ಕಿರುಸಾಕ್ಷ್ಯ ಚಿತ್ರವನ್ನು ವೀಕ್ಷಿಸಲಾಯಿತು.
ಮುಖ್ಯಮಂತ್ರಿಗಳ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ವಾರ್ತಾಧಿಕಾರಿ ಮಂಜು ನಾಥ್ ಬಿ., ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಉಡುಪಿ ಜಿಲ್ಲೆಯಲ್ಲಿ ಸರಕಾರದ ವಿವಿಧ ಯೋಜನೆಯ ನೆರವು ಪಡೆದ ಫಲಾನುಭವಿಗಳು ಹಾಗೂ ಕೋವಿಡ್-19ನಿಂದ ಗುಣಮುಖರಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಡುಪಿ ಡಯಟ್ನ ಹಿರಿಯ ಉಪನ್ಯಾಸಕ ಅಶೋಕ್ ಕಾಮತ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.