ಸಿಂಧೂ ರೂಪೇಶ್ ವರ್ಗಾವಣೆಗೆ ಸಿಪಿಎಂ ಖಂಡನೆ
ಮಂಗಳೂರು, ಆ.1: ಕರಾವಳಿ ಜಿಲ್ಲಾದ್ಯಂತ ಗೋ ಸಾಗಾಟ ಮಾಡುವವರನ್ನು ನಡು ರಸ್ತೆಯಲ್ಲಿ ತಡೆದು ಹಲ್ಲೆ ನಡೆಸಿ, ಅನೈತಿಕ ಪೊಲೀಸ್ಗಿರಿ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿಕೆ ನೀಡಿದ ದ.ಕ.ಜಿಲ್ಲಾಧಿಕಾರಿ ಸಿಂಧೂ ರೂಪೇಶ್ರನ್ನು ಮರುದಿನವೇ ವರ್ಗಾವಣೆ ಮಾಡಿರುವ ರಾಜ್ಯ ಸರಕಾರದ ಕ್ರಮ ಸರಿಯಾದುದಲ್ಲ ಎಂದು ಸಿಪಿಎಂ ದ.ಕ.ಜಿಲ್ಲಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.
ಈ ಕ್ರಮವು ಸರ್ವಾಧಿಕಾರಿ ಪ್ರವೃತ್ತಿಯನ್ನು ತೋರಿಸುತ್ತದೆ. ಮಾತ್ರವಲ್ಲದೆ ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಒಡ್ಡಿರುವ ಸಂಘ ಪರಿವಾರದ ಕಾರ್ಯಕರ್ತನ ಮೇಲೆ ಕಾನೂನು ಕ್ರಮ ಜರುಗಿಸುವ ಬದಲು ಜಿಲ್ಲಾಧಿಕಾರಿಗಳನ್ನೇ ವರ್ಗಾವಣೆ ಮಾಡಿರುವುದು ಅಕ್ಷಮ್ಯ. ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ಸರಕಾರಿ ಅಧಿಕಾರಿಗಳನ್ನು ಗುಲಾಮರಂತೆ ಕೆಲಸ ಮಾಡಿಸುವ ಪ್ರವೃತ್ತಿ ಅಪಾಯಕಾರಿಯಾಗಿದೆ. ನಾಗರಿಕ ಸಮಾಜ ಇದನ್ನು ಒಪ್ಪಲು ಸಾಧ್ಯವಿಲ್ಲವೆಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
Next Story