ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ
ಮಂಗಳೂರು, ಆ.3: ದ.ಕ ಜಿಲ್ಲೆಯಲ್ಲಿ ಸೋಮವಾರ ಹಗಲು ವೇಳೆ ಒಮ್ಮೆ ಮಳೆ ಕಡಿಮೆಯಾಗುವ ಲಕ್ಷಣ ಕಾಣಿಸಿದರೂ ಮತ್ತೆ ಬಿರುಸು ಪಡೆದು ಉತ್ತಮ ಮಳೆಯಾಗಿದೆ. ರಾತ್ರಿ ವೇಳೆ ಮಳೆಯ ಅಬ್ಬರದಿಂದ ವೇಗ ಪಡೆಯಿತು.
ಹವಾಮಾನ ಇಲಾಖೆ ‘ಆರೆಂಜ್’ ಅಲರ್ಟ್ ಘೋಷಿಸಿರುವಂತೆ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಘಟ್ಟ ಪ್ರದೇಶಗಳಲ್ಲಿಯೂ ಉತ್ತಮ ಮಳೆಯಾಗುತ್ತಿರುವುದರಿಂದ ನದಿಗಳಲ್ಲಿಯೂ ನೀರಿನ ಪ್ರಮಾಣ ಹೆಚ್ಚಾಗಿದ್ದು, ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ಸ್ನಾನಘಟ್ಟ ಮುಳುಗಡೆಯಾಗಿದೆ. ಜಿಲ್ಲೆಯ ಇತರೆಡೆಗಳಲ್ಲೂ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ ಉಂಟಾಗಿದೆ.
ಮಳೆಯೊಂದಿಗೆ ರಭಸವಾಗಿ ಗಾಳಿಯೂ ಬೀಸುತ್ತಿದ್ದು, ಮರಗಳು ಹಲವೆಡೆ ಮನೆಗಳಿಗೆ ಹಾನಿಯಾಗಿವೆ. ಸಮುದ್ರದಲ್ಲಿಯೂ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಶನಿವಾರದ ವರೆಗೂ ಆರೆಂಜ್ ಅಲರ್ಟ್ ಮುಂದುವರಿದಿದ್ದು, ಮಳೆಯೂ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಸೋಮವಾರ ಬೆಳಗ್ಗೆ ಅಂತ್ಯಗೊಂಡ ಹಿಂದಿನ 24 ಗಂಟೆಯಲ್ಲಿ ಜಿಲ್ಲೆಯ ಮಾಣಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 110 ಮಿ.ಮೀ (11 ಸೆಂ.ಮೀ.) ಮಳೆ ಸುರಿದಿದೆ. ಸುಬ್ರಹ್ಮಣ್ಯದಲ್ಲಿ 80, ಮಂಗಳೂರು ವಿಮಾನ ನಿಲ್ದಾಣದಲ್ಲಿ 70 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 52.6 ಮಿ.ಮೀ. ಮಳೆ ಸುರಿದಿದೆ.