ನರೇಗಾ ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ : ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು
ಉಡುಪಿ, ಆ. 4: ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತ್ಗಳಲ್ಲಿ ನರೇಗಾ ಕಾಮಗಾರಿಯನ್ನು ಅತ್ಯಂತ ಯಶ್ವಸಿಯಾಗಿಅನುಷ್ಠಾನಗೊಳಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ ದಾಖಲೆ ಸಂಖ್ಯೆಯ ಯುವಕರು ನರೇಗಾ ಕಾರ್ಯಕ್ರಮದಡಿ ಕಾಮಗಾರಿಯನ್ನು ನಿರ್ವಹಿಸಲು ಉತ್ಸುಕರಾಗಿದ್ದು ಕಾರ್ಯಕ್ರಮದ ಕುರಿತು ಮಾಹಿತಿ ನೀಡುವ ಕೆಲಸ ಆಗಬೇಕು ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಮಂಗಳವಾರ, ಅಂಬಲಪಾಡಿ ಗ್ರಾಪಂ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆಯ ಗಾ್ರಮಸಭೆಯಲ್ಲಿ ಮಾತನಾಡುತಿದ್ದರು.
ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ನರೇಗಾ ಕಾರ್ಯಕ್ರಮದಡಿ ಹಲವು ಕೆಲಸ ಕಾರ್ಯಗಳನ್ನು ಅನುಷ್ಠಾನಗೊಳಿಸಿ ಜಿಲ್ಲೆಯು ಪ್ರಥಮ ಸ್ಥಾನ ಗಳಿಸಿದ್ದು, ಇದೇ ರೀತಿ ಮುಂದೆಯೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಎಲ್ಲಾ ಗ್ರಾಪಂಗಳು ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಪವನ್ ಕುಮಾರ್, ತಾಲೂಕು ಸಂಯೋಜಕ ರಾಜು ಮೂಲ್ಯ, ತಾಪಂ ಸದಸ್ಯ ರಾಜೇಂದ್ರ ಪಂದುಬೆಟ್ಟು, ಪ್ರಮೋದ್ ಕೆ.ಸಾಲ್ಯಾನ್, ಸೋಮನಾಥ್ ಬಿ.ಕೆ, ಉಷಾ, ಪುಷ್ಪ ಶೆಟ್ಟಿ ಉಪಸ್ಥಿತರಿದ್ದರು.