ಗ್ರಾಮ ಪಂಚಾಯತ್ ಗಳಿಗೆ ತಾತ್ಕಾಲಿಕ ಸಮಿತಿ ನೇಮಿಸಲು ಹೈಕೋರ್ಟ್ ನಕಾರ
ಬೆಂಗಳೂರು, ಆ.11: ಅವಧಿ ಮುಗಿದಿರುವ ಗ್ರಾಮ ಪಂಚಾಯತ್ ಗಳಿಗೆ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡ ತಾತ್ಕಾಲಿಕ ಸಮಿತಿ ನೇಮಿಸಲು ಹೈಕೋರ್ಟ್ ನಿರಾಕರಿಸಿದೆ. ಜತೆಗೆ ಚುನಾಯಿತ ಪ್ರತಿನಿಧಿಗಳ ಅವಧಿ ವಿಸ್ತರಣೆ ಮಾಡಲು ಆಗುವುದಿಲ್ಲ ಎಂದು ತಿಳಿಸಿದೆ.
ಮಂಡ್ಯ ಜಿಲ್ಲೆಯ ಬಿ.ಎಚ್.ನಾಗಣ್ಣ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಗ್ರಾಮ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಲು ಡಿಸಿಗಳಿಗೆ ನಿರ್ದೇಶನ ನೀಡುವ ಮೂಲಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯನ್ನು ಸರಕಾರ ಉಲ್ಲಂಘನೆ ಮಾಡಿದೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಆಡಳಿತಾಧಿಕಾರಿಗಳ ನೇಮಕದ ಬಗ್ಗೆ ಪ್ರತ್ಯೇಕವಾಗಿ ಪ್ರಶ್ನಿಸಬಹುದೇ ಹೊರತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೂಲಕ ಅಲ್ಲ ಎಂದು ಪೀಠ ತಿಳಿಸಿತು.
Next Story