ಬೆಂಗಳೂರಿನಲ್ಲಿ ಹಿಂಸಾಚಾರ: ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ
ಬೆಂಗಳೂರು, ಆ.12: ದೇವರ ಜೀವನಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆ ನಡೆದ ಗಲಭೆಗಳ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ರವರಿಂದ ಸಮಗ್ರ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಮಾಡಿದ್ದಾರೆ.
ಬುಧವಾರ ಸಂಜೆ ತಮ್ಮ ಸರಕಾರಿ ನಿವಾಸ ಕಾವೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಜೊತೆ ತನಿಖೆಯ ಸ್ವರೂಪದ ಕುರಿತು ಮುಖ್ಯಮಂತ್ರಿ ಚರ್ಚೆ ನಡೆಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಹಿರಿಯ ಸಚಿವರು, ಪೊಲೀಸ್ ಅಧಿಕಾರಿಗಳು ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೂಲಕ ತನಿಖೆ ನಡೆಸಲು ನಿರ್ಧರಿಸಿದ್ದಾರೆ ಎಂದರು.
ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ಯಾವ ರೀತಿ ತನಿಖೆ ನಡೆಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಮಾರ್ಗಸೂಚಿಗಳನ್ನು ರಚನೆ ಮಾಡಿದೆ. ಅದರಂತೆ, ರಾಜ್ಯ ಸರಕಾರವು ಜಿಲ್ಲಾ ಮ್ಯಾಜಿಸ್ಟೇಟ್ ಮೂಲಕ ತನಿಖೆ ನಡೆಸಲು ನಿರ್ಧರಿಸಿದೆ ಎಂದು ಅವರು ಹೇಳಿದರು.