ಶಾಸ್ತ್ರೀಯ ಅಧ್ಯಯನ ಕೇಂದ್ರಕ್ಕೆ ನಿರ್ದೇಶಕರಾಗಿ ಶಿವರಾಮಶೆಟ್ಟಿ ಆಯ್ಕೆ

ಬೆಂಗಳೂರು, ಆ.18: ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದಲ್ಲಿರುವ ಶಾಸ್ತ್ರೀಯ ಕನ್ನಡದ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕರಾಗಿ ಡಾ.ಬಿ. ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.
ಕಾಸರಗೋಡಿನಲ್ಲಿರುವ ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಶಿವರಾಮಶೆಟ್ಟಿ ಸದ್ಯ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕೇಂದ್ರವು, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಭಾಷಾ ಸಂಸ್ಥಾನದಿಂದ ನಡೆಯುತ್ತಿದೆ. 63 ವರ್ಷದ ಶಿವರಾಮ ಶೆಟ್ಟಿ, ಆಧುನಿಕ ಮತ್ತು ಮಧ್ಯಕಾಲೀನ ಕನ್ನಡ ಸಾಹಿತ್ಯ, ಸಾಹಿತ್ಯ ಸಿದ್ಧಾಂತ, ಜಾನಪದ, ತುಳು ಜಾನಪದ, ಸಾಂಸ್ಕೃತಿಕ ಅಧ್ಯಯನ ಹೀಗೆ ಹಲವು ವಿಷಯಗಳಲ್ಲಿ ತಜ್ಞರೆನಿಸಿಕೊಂಡಿದ್ದಾರೆ. 50ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಬರೆದಿರುವ ಇವರು, 70ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ‘ತುಳುನಾಡಿನ ಸಸ್ಯ ಜಾನಪದ’ ಅವರ ಪಿಎಚ್ಡಿ ಪ್ರಬಂಧ. ಮಂಗಳೂರು ವಿವಿಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದಾರೆ.
Next Story





