ರೈತರಿಂದಲೇ ಬೆಳೆ ಸಮೀಕ್ಷೆ: ನಿಖರ ಬೆಳೆ ದಾಖಲಾತಿಗೆ ರೈತರಿಗೆ ಅವಕಾಶ
ಉಡುಪಿ, ಆ.19: ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆ.10ರಿಂದ ಆರಂಭಗೊಂಡಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ಆ.24ರೊಳಗೆ ಮೊಬೈಲ್ ಆ್ಯಪ್ ಮೂಲಕ ದಾಖಲಿಸ ಬಹುದಾಗಿದೆ.
ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಲಾಗಿದ್ದು, ರೈತರು ಗೂಗಲ್ ಪ್ಲೇ ಸ್ಟೋರ್ನಿಂದ ಬೆಳೆ ಸಮೀಕ್ಷೆ 2020 ಆ್ಯಪ್ನ್ನು ಡೌನ್ಲೋಡ್ ಮಾಡಿ ಆರ್ಥಿಕ ವರ್ಷವನ್ನು ನಮೂದು ಮಾಡಿ ರೈತರ ಹೆಸರು, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯ ಗೊಳಿಸುವುದರಿಂದ ಅಧಿಕೃತ ಮೊಬೈಲ್ ಸಂಖ್ಯೆಗೆ ಓಟಿಪಿ ಬರಲಿದೆ. ಆ್ಯಪ್ಗೆ ಓಟಿಪಿ ದಾಖಲಿಸಿ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೇ ನಂಬರ್, ಹಿಸ್ಸಾ, ಮಾಲಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ ತಮ್ಮ ಸರ್ವೇ ನಂಬರ್, ಜಮೀನಿನಲ್ಲಿ ನಿಂತು ವಿವರ ದಾಖಲಿಸಿ ಫೋಟೊ ತೆಗೆದು ಮಾಹಿತಿಗಳನ್ನು ಆಪ್ಲೋಡ್ ಮಾಡಬಹುದಾಗಿದೆ.
ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆಯ ಅನುಷ್ಟಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ, ಬೆಳೆ ಕಟಾವು ಪ್ರಯೋಗ ಅನುಷ್ಟಾನ, ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಟಾನ ಹಾಗೂ ಪಹಣೆಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.
ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪ- ದೋಷಗಳಿಲ್ಲದೇ ದಾಖಲಿಸಿ ಈ ಯೋಜನೆ ಪ್ರಯೋಜನವನ್ನು ಪಡೆದು ಕೊಂಡು ಮುಂಗಾರು 2020ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.