ಅನುದಾನ ಸಮರ್ಪಕ ಅನುಷ್ಠಾನವಾಗಲಿ: ಇಒ
ಎಸ್ಸಿಪಿ, ಟಿಎಸ್ಪಿ ಮೇಲ್ವಿಚಾರಣಾ ಸಮಿತಿ ಸಭೆ
ಮಂಗಳೂರು, ಆ.19: ಅನುಸೂಚಿತ ಜಾತಿ ಉಪ-ಹಂಚಿಕೆ ಮತ್ತು ಬುಡಕಟ್ಟು ಉಪ-ಹಂಚಿಕೆಯ ಯೋಜನೆಯಡಿ ಎಲ್ಲ ಇಲಾಖೆಗಳು ಬಿಡುಗಡೆಗೊಂಡ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಮಂಗಳೂರು ತಾಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಇಒ) ಸದಾನಂದ ತಿಳಿಸಿದ್ದಾರೆ.
ನಗರದ ಮಂಗಳೂರು ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಅನುಸೂಚಿತ ಜಾತಿ ಉಪ-ಹಂಚಿಕೆ ಮತ್ತು ಬುಡಕಟ್ಟು ಉಪ-ಹಂಚಿಕೆಯ ಮೇಲ್ವಿಚಾರಣಾ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಅನುಸೂಚಿತ ಜಾತಿ ಉಪ-ಹಂಚಿಕೆ ಮತ್ತು ಬುಡಕಟ್ಟು ಉಪ-ಹಂಚಿಕೆಯಡಿ ರಾಜ್ಯ ಮತ್ತು ಜಿಲ್ಲಾ ವಲಯದಲ್ಲಿ ವಿಶೇಷ ಘಟಕ ಯೋಜನೆಯ ಪ್ರಗತಿ ವಿವರ ಹಾಗೂ ಪರಿಶಿಷ್ಟ ವರ್ಗಗಳ ಉಪಯೋಜನೆಯ ವಿವಿಧ ಇಲಾಖಾ ಪ್ರಗತಿ ವಿವರದ ಬಗ್ಗೆ ಅವರು ಮಾಹಿತಿ ಪಡೆದರು.
ಸಭೆಯಲ್ಲಿ ಮಾತನಾಡಿದ ಮಂಗಳೂರು ಸಹಾಯಕ ಕೃಷಿ ನಿರ್ದೇಶಕ, ಕೃಷಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಮಣ್ಣಿನ ಸತ್ವ ಹೆಚ್ಚಿಸು ವಿಕೆ ಯೋಜನೆಯನ್ವಯ ಹಸಿರೆಲೆ ಗೊಬ್ಬರದ ಬೀಜ, ಕೃಷಿ, ಸುಣ್ಣ ಕಾರ್ಯಕ್ರಮದಲ್ಲಿ ಲಘು ಪೋಷಕಾಂಶ ಸಾವಯವ ಗೊಬ್ಬರ ವಿತರಣೆಗೆ ರಾಜ್ಯ ವಲಯದಲ್ಲ್ಲಿ 0.64ರಷ್ಟು ಅನುದಾನ ಬಿಡುಗಡೆಗೊಂಡಿದೆ ಎಂದರು.
ಜಿಲ್ಲಾ ವಲಯದಲ್ಲಿ ಅನುದಾನ ಬಿಡುಗಡೆಗೊಂಡಿಲ್ಲ. ಪರಿಶಿಷ್ಟ ವರ್ಗಗಳ ಉಪಯೋಜನೆಯಡಿ 2020-21ನೇ ಸಾಲಿಗೆ ರಾಜ್ಯ ವಲಯದಲ್ಲಿ 0.21ರಷ್ಟು ಅನುದಾನ ಬಿಡುಗಡೆಗೊಂಡಿದೆ. ಜಿಲ್ಲಾ ವಲಯದಲ್ಲಿ ಅನುದಾನ ಬಿಡುಗಡೆಯಾಗಿಲ್ಲ ಎಂದು ಸಭೆಗೆ ತಿಳಿಸಿದರು.
ತೋಟಗಾರಿಕೆ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಕಾರ್ಯಕ್ರಮದಲ್ಲಿ ಹೂ ಬೆಳೆಗಾರರಿಗೆ ಪರಿಹಾರ ಧನ ಘಟಕಕ್ಕೆ ರಾಜ್ಯವಲಯದಲ್ಲಿ ಅನುದಾನ ಬಿಡುಗಡೆಯಾಗಿದೆ. ಜಿಲ್ಲಾ ವಲಯದಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮದಡಿ 5,000 ರೂ. ಅನುದಾನ ಬಿಡುಗಡೆಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಪರಿಶಿಷ್ಟ ವರ್ಗಗಳ ಉಪಯೋಜನೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಕಾರ್ಯಕ್ರಮದಲ್ಲಿ ಹೂ ಬೆಳೆಗಾರರಿಗೆ ಪರಿಹಾರ ಧನ ಘಟಕಕ್ಕೆ ರಾಜ್ಯ ವಲಯದಲ್ಲಿ 2,000 ರೂ. ಬಿಡುಗಡೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ವಲಯ ಅರಣ್ಯಾಧಿಕಾರಿ ಮಾತನಾಡಿ, ಪರಿಶಿಷ್ಟ ವರ್ಗಗಳ ಉಪಯೋಜನೆಯಡಿ ಜಿಲ್ಲಾ ವಲಯ, ಹೈನುಗಾರಿಕೆ ಘಟಕಕ್ಕೆ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 1 ಮಿಶ್ರತಳಿ ಹಸು ಸಾಕಣೆಗೆ ಬ್ಯಾಂಕ್ ಸಾಲದೊಂದಿಗೆ ಶೇ.90ರಷ್ಟು ಸಹಾಯಧನ ನೀಡುವ ಕಾರ್ಯಕ್ರಮದಲ್ಲಿ 2020-21ನೇ ಸಾಲಿಗೆ ನಿಗದಿಪಡಿಸಿದ ಗುರಿಯನ್ವಯ ಶೇ.3ರಷ್ಟು ಭೌತಿಕ ಹಾಗೂ ಶೇ.1.62 ಆರ್ಥಿಕ ಪ್ರಗತಿ ಸಾಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ನಗರ) ವಿಶೇಷ ಘಟಕ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದನ್ವಯ ಶೇ.15.83ರಷ್ಟು ಅನುದಾನ ಬಿಡುಗಡೆಯಾಗಿದೆ. ಶೇ.7.60ರಷ್ಟು ಪ್ರಗತಿ ಸಾಧಿಸಿದೆ. ಸ್ತ್ರೀ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಅನುದಾನ ಬಂದಿಲ್ಲ. ವಿಪರೀತ ಕಡಿಮೆ ತೂಕದ ಮಕ್ಕಳು ಕಾರ್ಯಕ್ರಮದಡಿ ವಿಪರೀತ ತೂಕದ ಮಕ್ಕಳಿಗೆ ವಾರದ 5 ದಿನ ಮೊಟ್ಟೆ ಹಾಗೂ ಹಾಲು ವಿತರಣೆ ಮಾಡಲಾಗುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.
ಇಲಾಖೆಯಿಂದ ವೈದ್ಯಕೀಯ ವೆಚ್ಚ 2,000 ರೂ. ಭರಿಸಲಾಗುತ್ತದೆ. ಮಾತೃವಂದನಾ ಯೋಜನೆಯಡಿ 53 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆನ್ಲೈನ್ ಮೂಲಕ ಮೊತ್ತವನ್ನು ಜಮೆ ಮಾಡಲಾಗುತ್ತದೆ ಎಂದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ಧರು.
ಸೋಲಾರ್ ಲ್ಯಾಂಪ್ಗೆ 50 ಸಾವಿರ ಅನುದಾನ
ಪರಿಶಿಷ್ಟ ವರ್ಗಗಳ ಉಪಯೋಜನೆಯಡಿ ರಾಜ್ಯ ವಲಯದಲ್ಲಿ ಆಯ್ದ ಫಲಾನುಭವಿಗಳಿಗೆ ಸೋಲಾರ್ ಲ್ಯಾಂಪ್ ಅಳವಡಿಕೆ ಕಾರ್ಯಕ್ರಮದಲ್ಲಿ 2020-21ನೇ ಸಾಲಿಗೆ 50,000 ರೂ. ಬಿಡುಗಡೆಗೊಂಡಿದೆ. ಬಾಕಿ ಉಳಿದವುಗಳಿಗೆ ಕ್ರಿಯಾ ಯೋಜನೆ ತಯಾರಿಸಿ ತಾಲೂಕು ಪಂಚಾಯತ್ಗೆ ಮಂಡಿಸಲಾಗಿದ್ದು, ಅನುಮೋದನೆ ನಂತರ ಕ್ರಮ ಕೈಗೊಳ್ಳಲಾಗುತ್ತದೆ. ವಿಶೇಷ ಘಟಕ ಯೋಜನೆಯಡಿ ರಾಜ್ಯವಲಯ ಹಾಗೂ ಜಿಲ್ಲಾ ವಲಯ ದಲ್ಲಿ ಅನುದಾನ ಬಿಡುಗಡೆಯಾಗಿಲ್ಲ ಎಂದು ವಲಯ ಅರಣ್ಯಾಧಿಕಾರಿ ತಿಳಿಸಿದರು