ಶಿಕ್ಷಕರ ಅಲೆದಾಟಕ್ಕೆ 'ಆ್ಯಪ್' ಸೇವೆಯಿಂದ ಇತಿಶ್ರೀ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಆ. 28: `ಒಬ್ಬ ಸಚಿವರು ಹೇಗೆ ಜನಮುಖಿಯಾಗಿ ಕೆಲಸ ಮಾಡಬಹುದೆಂಬುದಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾದರಿಯಾಗಿದ್ದಾರೆ. ಅವರ ಸತ್ಕಾರ್ಯಗಳು ಹೀಗೆ ಮುಂದುವರಿಯಲಿ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಹಾರೈಸಿದ್ದಾರೆ.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಿಕ್ಷಕ ಮಿತ್ರ ಮೊಬೈಲ್ ಆ್ಯಪ್, ವಿದ್ಯಾವಿನೀತ ಹಾಗೂ ಶಿಕ್ಷಣ ಯಾತ್ರೆ ಕೃತಿಗಳ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಅತ್ಯಂತ ಸಂತೋಷದಿಂದ ಶಿಕ್ಷಕ ಮಿತ್ರ ಆ್ಯಪ್ ಮತ್ತು ಸಚಿವ ಸುರೇಶ್ ಕುಮಾರ್ ಅವರ `ವಿದ್ಯಾವಿನೀತ' ಮತ್ತವರ ಅಂಕಣ ಬರಹದ ಸಂಗ್ರಹ `ಶಿಕ್ಷಣಯಾತ್ರೆ' ಪುಸ್ತಕವನ್ನು ಬಿಡುಗಡೆ ಮಾಡಿದ್ದೇನೆ ಎಂದರು.
ಶಿಕ್ಷಕರು ತಮ್ಮ ಕೆಲಸಗಳಿಗಾಗಿ ಶಾಲೆಗಳಿಗೆ ರಜೆ ಹಾಕಿ ಇಲಾಖೆಯ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಶಿಕ್ಷಕರುಗಳಿಗೆ ಅನುಕೂಲವಾಗುವಂತೆ 2019-20ರ ಆಯವ್ಯಯದಲ್ಲಿ ನಾನು ಘೋಷಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ತಂತ್ರಜ್ಞಾನಾಧಾರಿತ ಶಿಕ್ಷಕ ಮಿತ್ರ-ಆ್ಯಪ್ ತಯಾರಿಸಿದೆ. ಶಿಕ್ಷಕರು ಮೊಬೈಲ್ನಲ್ಲಿ ಈ ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಂಡು ತಾವು ಕುಳಿತಲ್ಲೇ ತಮ್ಮ ಸೇವಾ ವಿಷಯಗಳನ್ನು, ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದರು.
ಆ್ಯಪ್ ಮೂಲಕ ನಿರ್ದಿಷ್ಟ ಸಮಸ್ಯೆಗಳನ್ನು ಇಂತಿಷ್ಟು ದಿನಗಳಲ್ಲಿ ಬಗೆಹರಿಸುವ ಬಗ್ಗೆ ಕಾಲಾವಧಿ ನಿರ್ಧರಿಸಲಾಗಿದೆ. ಇನ್ನು ಮುಂದೆ ಶಿಕ್ಷಕರ ಅಲೆದಾಟಕ್ಕೆ ಆ್ಯಪ್ ಸೇವೆಯ ಮೂಲಕ ಇತಿಶ್ರೀ ಹಾಡಲಾಗುತ್ತಿದೆ. ಈ ಬಾರಿಯಿಂದ ಸಾರ್ವತ್ರಿಕ ವರ್ಗಾವಣೆ ಅರ್ಜಿಯನ್ನು ಈ ಶಿಕ್ಷಕ ಮಿತ್ರ-ಆ್ಯಪ್ ಮೂಲಕವೇ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಕೃತಿಗಳು ಅವರ ವ್ಯಕ್ತಿತ್ವ, ಸ್ವಭಾವಕ್ಕೆ ಕನ್ನಡಿ ಹಿಡಿದಂತಿದೆ. ಇದು ಅವರ ಗುಣಸ್ವಭಾವಕ್ಕೆ ಅನ್ವರ್ಥವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಕ್ಷಣ ಇಲಾಖೆಯನ್ನು ಒಂದು ಚೌಕಟ್ಟಿಗೆ ಒಳಪಡಿಸಿ ಶಿಕ್ಷಕ ಸ್ನೇಹಿ, ಶಿಕ್ಷಣ ಸ್ನೇಹಿ ಮತ್ತು ವಿದ್ಯಾರ್ಥಿ ಸ್ನೇಹಿಯಾಗಿ ಕೆಲಸ ಮಾಡಿ ಜನಪ್ರಿಯರಾಗಿದ್ದಾರೆ. ಶಿಕ್ಷಕರ ವರ್ಗಾವಣೆ ನೀತಿಯನ್ನು ಸರಳೀಕರಣಗೊಳಿಸಿ ಶಿಕ್ಷಕರಿಗೆ ನೆಮ್ಮದಿ ತಂದಿದ್ದಾರೆ. ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಕೋವಿಡ್ ವಿಷಮ ಕಾಲಘಟ್ಟದಲ್ಲಿಯೂ ಯಶಸ್ವಿಯಾಗಿ ನಡೆಸಿದ್ದಾರೆ. ಜನಪರ ಕಾಳಜಿಯ ಸುರೇಶ್ ಕುಮಾರ್ ಅವರ ವ್ಯಕ್ತಿತ್ವ, ಇಲಾಖೆಯಲ್ಲಿನ ಅವರ ಸಾಧನೆ, ಅವರ ಸ್ವಭಾವವನ್ನು ಈ ಪುಸ್ತಕದಲ್ಲಿ ತಮ್ಮ ಲೇಖನಗಳ ಮೂಲಕ ಹಂಚಿಕೊಂಡಿದ್ದು ಶಿಕ್ಷಕರಿಗೆ, ಪೋಷಕರಿಗೆ, ನಾಡಿನ ಜನರಿಗೆ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಅರುಣ್ ಶಹಾಪುರ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳ ಉಪಸ್ಥಿತರಿದ್ದರು.
.jpg)







