'ಶಿಕ್ಷಣ ನೀತಿ' ಜಾರಿಗೆ ಸ್ವಾಮೀಜಿಗಳ ಮಾರ್ಗದರ್ಶನ ಕೋರಿದ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಆ. 29: ಇಡೀ ದೇಶ ಹಾಗೂ ರಾಜ್ಯದ ದಿಕ್ಸೂಚಿಯನ್ನೇ ಬದಲಿಸಬಲ್ಲ ಶಕ್ತಿ ಹೊಂದಿರುವ `ರಾಷ್ಟ್ರೀಯ ಶಿಕ್ಷಣ ನೀತಿ'ಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ನಾಡಿನ ಎಲ್ಲ ಸ್ವಾಮೀಜಿಗಳು ಮಾರ್ಗದರ್ಶನ ಹಾಗೂ ಸಲಹೆಗಳನ್ನು ನೀಡಿ ಈ ಮಹತ್ಕಾರ್ಯದಲ್ಲಿ ಸರಕಾರದ ಕೈಹಿಡಿದು ಮುನ್ನಡೆಸಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಂದಿಲ್ಲಿ ಮನವಿ ಮಾಡಿದ್ದಾರೆ.
ಶನಿವಾರ ಮೈಸೂರಿನ ಸುತ್ತೂರು ಮಠದಲ್ಲಿ ಏರ್ಪಡಿಸಲಾಗಿದ್ದ ಸುತ್ತೂರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 105ನೆ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ `ಪ್ರಸಾದ' ಮಾಸಪತ್ರಿಕೆಯನ್ನು ವರ್ಚುವಲ್ ವೇದಿಕೆ ಮೂಲಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಶಿಕ್ಷಣ ನೀತಿಯನ್ನು ಮೊತ್ತ ಮೊದಲಿಗೆ ರಾಜ್ಯದಲ್ಲಿ ಜಾರಿ ಮಾಡಲು ಸರಕಾರ ಹೆಜ್ಜೆಗಳನ್ನು ಇಡುತ್ತಿದೆ. ಈಗಾಗಲೇ ಈ ನಿಟ್ಟಿನಲ್ಲಿ ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು, ಜಾಗತಿಕ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ರೂಪಿಸಬೇಕು ಎಂಬ ನಿಟ್ಟಿನಲ್ಲಿ ನೀತಿಯಲ್ಲಿ ಅಡಕವಾಗಿರುವ ಅಂಶಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ಆಶೀರ್ವಾದ ಅಗತ್ಯವಿದೆ ಎಂದರು.
ಮಠದ ಕಾಣಿಕೆ ಅನನ್ಯ: ಒಂದೆಡೆ ಸರಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗಲೇ, ಸುತ್ತೂರು ಮಠವು ಈ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದೆ. ಶಿಕ್ಷಣ, ಆರೋಗ್ಯ, ಧಾರ್ಮಿಕ ಕ್ಷೇತ್ರಗಳಲ್ಲಿ ಅತ್ಯಂತ ಉನ್ನತ ಸಾಧನೆ ಮಾಡಿದೆ ಎಂದು ಹೇಳಿದ ಅವರು, ಅತ್ಯಂತ ಪ್ರಾಚೀನವಾದ ಶ್ರೀಮಠವು ಶಿಕ್ಷಣದಲ್ಲಂತೂ ಜಗತ್ತೇ ಗಮನ ಸೆಳೆಯುವಂಥ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದ ಈ ಕಾರ್ಯಕ್ರಮವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ರೈಲ್ವೆ ಸಹಾಯಕ ಸಚಿವ ಸುರೇಶ್ ಅಂಗಡಿ ವರ್ಚುವಲ್ ವೇದಿಕೆ ಮೂಲಕ ಭಾಗಿಯಾಗಿದ್ದರು.
ಸಚಿವ ಎಸ್.ಟಿ.ಸೋಮಶೇಖರ್, ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ವೆಂಕಟೇಶ್ ಹಾಜರಿದ್ದರು.







