ಅಥಣಿಯಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ಬ್ಯಾನರ್ ಗೆ ಕಲ್ಲು ತೂರಾಟ: ಕೃತ್ಯ ಖಂಡಿಸಿ ರಸ್ತೆ ತಡೆ, ಟೈರ್ ಗೆ ಬೆಂಕಿ
ಬೆಳಗಾವಿ, ಆ. 30: ಜಿಲ್ಲೆಯ ಅಥಣಿ ತಾಲೂಕಿನ ಯಲಿಹಡಗಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇರುವ ಬ್ಯಾನರ್ ಗೆ ಕೆಲ ಕಿಡಿಗೇಡಿಗಳು ಶನಿವಾರ ರಾತ್ರಿ ಕಲ್ಲು ತೂರಿ ಹಾನಿಯುಂಟು ಮಾಡಿದ್ದು, ಕೃತ್ಯವನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದರು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಐಗಳಿ ಹಾಗೂ ಅಥಣಿ ಪೊಲೀಸರು ಪ್ರತಿಭಟನಾನಿತರ ಮನವೊಲಿಸಿ ಸ್ಥಳದಲ್ಲಿ ಶಾಂತಿಯ ವಾತಾವರಣ ನಿರ್ಮಿಸಿದ್ದಾರೆ.
ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಗಲಾಟೆ ನಡೆದು ಕೊನೆಗೆ ಮರಾಠಿ ಮತ್ತು ಕನ್ನಡಿಗರ ನಡುವೆ ಸಂಧಾನದ ಬಳಿಕ ಶಾಂತಿ ನೆಲೆಸಿದೆ. ಈ ನಡುವೆ ಯಲಿಹಡಗಿ ಗ್ರಾಮದಲ್ಲಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಕೆಲವು ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಕಲ್ಲುತೂರಿ ಹೂವಿನ ಹಾರ ಹರಿದು ಅವಮಾನಿಸಿರುವ ಘಟನೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಅಥಣಿ ಐಗಳಿ ರಸ್ತೆಯನ್ನು ಬಂದ್ ಮಾಡಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ದಯಾನಂದ ವಾಘ್ಮೋರೆ, ಬಾಬಾ ಸಾಹೇಬ ಅಂಬೇಡ್ಕರ್ ಅವರ ಸಂವಿಧಾನದ ಫಲವಾಗಿ ಇಂದು ಬಹು ಜನರು ಸಮಾಜದಲ್ಲಿ ತಲೆ ಎತ್ತಿ ಸ್ವಾಭಿಮಾನದಿಂದ ಬದುಕು ನಡೆಸುವಂತಾಗಿದೆ. ಎಲ್ಲಿಯವರೆಗೆ ನಾವು ಅನ್ಯಾಯದ ವಿರುದ್ಧ ಧ್ವನಿ ಎತ್ತುವುದಿಲ್ಲವೋ ಅಲ್ಲಿಯವರೆಗೆ ನಮ್ಮ ಮೇಲಿನ ದೌರ್ಜನ್ಯ ನಿಲ್ಲುವುದಿಲ್ಲ. ಹೀಗಾಗಿ, ಎಲ್ಲ ಗ್ರಾಮಗಳಲ್ಲಿ ಬಹುಜನರು ಒಂದಾಗಿ ಅನ್ಯಾಯದ ವಿರುದ್ದ ಧ್ವನಿ ಎತ್ತಬೇಕಿದೆ. ಇಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬರನ್ನು ಅಗೌರವದಿಂದ ಕಾಣುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕೆಲಸವಾಗಬೇಕಿದೆ ಎಂದು ಆಗ್ರಹಿಸಿದರು.
ಸ್ಥಳದಲ್ಲಿ ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ, ಪೊಲೀಸರು ಸ್ಥಳಕ್ಕೆ ಬಂದು ಪ್ರತಿಭಟನಾಕಾರರ ಮನವೊಲಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಭಟನಾಕಾರು ಕಿಡಿಗೇಡಿಗಳನ್ನು ಬಂಧಿಸುವಂತೆ ಪಟ್ಟು ಹಿಡಿದು ಹಾನಿಯಾದ ಭಾವಚಿತ್ರದ ಎದುರು ಶಾಂತವಾಗಿ ಕುಳಿತು ಪ್ರತಿಭಟನೆಗೆ ಮುಂದಾಗಿದ್ದರು. ಹೊಸ ಬ್ಯಾನರ್ ಅಳವಡಿಸಿ ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡುವ ಮೂಲಕ ಸಮಸ್ಯೆ ಬಗೆಹರಿಸಲಾಯಿತು.