ಗಾಂಜಾ ಮಾರಾಟ: ಪ್ರತ್ಯೇಕ ಪ್ರಕರಣಗಳಲ್ಲಿ ಐವರು ಆರೋಪಿಗಳ ಸೆರೆ
![ಗಾಂಜಾ ಮಾರಾಟ: ಪ್ರತ್ಯೇಕ ಪ್ರಕರಣಗಳಲ್ಲಿ ಐವರು ಆರೋಪಿಗಳ ಸೆರೆ ಗಾಂಜಾ ಮಾರಾಟ: ಪ್ರತ್ಯೇಕ ಪ್ರಕರಣಗಳಲ್ಲಿ ಐವರು ಆರೋಪಿಗಳ ಸೆರೆ](https://www.varthabharati.in/sites/default/files/images/articles/2020/09/1/257321-1598964386.jpg)
ಬೆಂಗಳೂರು, ಸೆ.1: ಮಾದಕ ವಸ್ತುಗಳ ಮಾರಾಟ ಸಂಬಂಧ ಪ್ರತ್ಯೇಕ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಗಾಂಜಾ ಖರೀದಿ ಮಾಡಿ ರೈಲಿನ ಮೂಲಕ ನಗರಕ್ಕೆ ತಂದು ವಿವಿಧೆಡೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಡಿ ಮುಹಮ್ಮದ್ ರಿಪಾನ್ ಸೇರಿದಂತೆ ಮೂವರನ್ನು ಇಲ್ಲಿನ ಬೇಗೂರು ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಬಂಧಿತರು ವಿಶ್ವಪ್ರಿಯ ಲೇಔಟ್ನಲ್ಲಿರುವ ಮುನೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಮೂಲತಃ ಪಶ್ಚಿಮ ಬಂಗಾಳ ರಾಜ್ಯಕ್ಕೆ ಸೇರಿದವರಾಗಿದ್ದು, ಅಲ್ಲಿಂದ ಅಕ್ರಮವಾಗಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದ್ದು, 4 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.
ಇಬ್ಬರ ಸೆರೆ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮುನಿರಾಜು ಹಾಗೂ ನಾಗೇಶ್ ಎಂಬುವರನ್ನು ಬಂಧಿಸಿರುವ ಪೊಲೀಸರು, ಇವರಿಂದ 3.5 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಪಟ್ಟಣದ ಹೊರವಲಯದ ಡಾಬಾ ಬಳಿ ಗಾಂಜಾ ಸಾಗಾಣಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.