ಮೇಘಾ-ಇ ಲೋಕ್ ಅದಾಲತ್ನ ಪ್ರಯೋಜನ ಪಡೆದುಕೊಳ್ಳಿ: ಕಕ್ಷಿದಾರರಿಗೆ ಜಿಲ್ಲಾ ನ್ಯಾಯಾಧೀಶರ ಮನವಿ
ಉಡುಪಿ, ಸೆ.1: ಕಕ್ಷಿದಾರರು ನ್ಯಾಯಾಲಯಕ್ಕೆ ಆಗಮಿಸದೇ ತಾವು ಇರುವ ಲ್ಲಿಂದಲೇ, ಸೆಪ್ಟಂಬರ್ 19ರಂದು ನಡೆಯುವ ಮೇಘಾ ಇ ಲೋಕ್ ಅದಾಲತ್ ಮೂಲಕ ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳುವಂತೆ ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ತಿಳಿಸಿದ್ದಾರೆ.
ಮಂಗಳವಾರ ಉಡುಪಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಈ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿ ಸಾರ್ವಜನಿಕರು ತಮ್ಮ ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಆಗಮಿಸುವುದು ಕಷ್ಟ ಸಾಧ್ಯವಾಗಿದೆ. ಇ-ಲೋಕ್ ಅದಾಲತ್ ಮೂಲಕ ಅವರು ತಮ್ಮ ಪ್ರಕರಣಗಳಿಗೆ ಸಂಬಂದಿಸಿದಂತೆ ಶೀಘ್ರದಲ್ಲಿ ಪರಿಹಾ ಪಡೆಯುವಂತೆ ಅವರು ತಿಳಿಸಿದರು.
ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣ ಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕ ಕಾರ್ಮಿಕರ ವೇತನಕ್ಕೆ ಸಂಬಂದಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಚೇದನ ಹೊರತುಪಡಿಸಿ), ವೇತನ ಮತ್ತು ಭತ್ಯೆಗಳಿಗೆ ಸಂಬಂದಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದರು.
ಮೋಟಾರು ಅಪಘಾತ ಪ್ರಕರಣಗಳನ್ನು ರಾಜೀ ಮಾಡಲು ವಿಮಾ ಕಂಪೆನಿ ಗಳ ವಕೀಲರು ಹಾಗೂ ಅಧಿಕಾರಿಗಳು ಹೆಚ್ಚಿನ ಸಹಕಾರ ನೀಡಬೇಕು. ಇದರಿಂದಾಗಿ ಸಂಕಷ್ಠದಲ್ಲಿರುವವರು ಪರಿಹಾರದ ಹಣವನ್ನು ಶೀಘ್ರವೇ ಪಡೆಯಲು ಸಾಧ್ಯವಾಗುತ್ತದೆ ಎಂದ ಅವರು, ಇತರೆ ಕೇಸ್ಗಳನ್ನು ಲೋಕ್ ಅದಾಲತ್ನಲ್ಲಿ ಇತ್ಯರ್ಥ ಪಡಿಸಲು ವಕೀಲರು ಮುಂದಾಗಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿವೇಕಾನಂದ ಎಸ್.ಪಂಡಿತ್, ಲಾವಣ್ಯ, ಭವಾನಿ ಉಪಸ್ಥಿತರಿದ್ದರು.