ಸೆ.11: ರೈತ ದಲಿತ ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟದಿಂದ ಜಿಲ್ಲಾ ಮಟ್ಟದ ವಿಚಾರಗೋಷ್ಠಿ
ಮಂಗಳೂರು, ಸೆ.2: ರೈತ ವಿರೋಧಿ ಕಾಯ್ದೆಯ ಬಗ್ಗೆ ಜನ ಜಾಗ್ರತಿ ಮೂಡಿಸುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರೈತ, ದಲಿತ, ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟದ ವತಿಯಿಂದ ಸೆ.11ರಂದು ಬೆಳಗ್ಗೆ 10ಗಂಟೆಗೆ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ರವಿಕಿರಣ ಪುಣಚ ನಗರದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ವಿಚಾರಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶ ನಾಗಮೋಹನ್ ದಾಸ್ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಹಸಿರು ಸೇನೆಯ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ವಿಷಯ ಮಂಡನೆ ಮಾಡಲಿದ್ದಾರೆ. ಕರ್ನಾಟಕ ಪ್ರಾಂತ್ಯ ರೈತ ಸಂಘದ ಉಪಾಧ್ಯಕ್ಷ ಮಾರುತಿ ಮಾನ್ಪಡೆ, ಖ್ಯಾತ ಸಾಮಾಜಿಕ ಚಿಂತಕ ಶಿವಸುಂದರ ಗೋಷ್ಟಿಯನ್ನು ನಿರ್ವಹಿಸಲಿದ್ದಾರೆ.
ಒಂದು ಕಡೆ ವಿಶ್ವ ಕೊರೋನ ವೈರಸ್ ದಾಳಿಯಿಂದ ನಲುಗುತ್ತಿದೆ. ದೇಶದ ಜನತೆ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಈಡಾಗಿ ಕಂಗೆಟ್ಟಿದೆ. ಇಂತಹ ಸಂದರ್ಭದಲ್ಲಿ ಜನರ ಆರೋಗ್ಯಕ್ಕೆ ಪೂರಕವಾದ ಯೋಜನೆ ರೂಪಿಸುವ ಬದಲು ರೈತ ಕಾರ್ಮಿಕ ಹಾಗೂ ಜನವಿರೋಧಿ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ,ಅಗತ್ಯ ಸರಕುಗಳ ಕಾಯ್ದೆ ತಿದ್ದುಪಡಿಗಳನ್ನು ಸುಗ್ರಿವಾಜ್ಞೆಗಳ ಮೂಲಕ ಜಾರಿ ಮಾಡಿದ್ದು ವಿದ್ಯುತ್ ಖಾಸಗೀಕರಣ ಮತ್ತು ಮೇಲ್ಜಾತಿಯವರಿಗೆ ಶೇಕಡಾ 10ಮೀಸಲಾತಿ ಮಾಡಿರುವುದರ ಲೋಪ ದೋಷಗಳ ಬಗ್ಗೆ ವಿಚಾರಗೋಷ್ಠಿ ನಡೆಯಲಿದೆ. ಇದರಲ್ಲಿ ಜಿಲ್ಲೆಯ ಸುಮಾರು 10ಕ್ಕೂ ಅಧಿಕ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ನಡೆಯಲಿದೆ ಎಂದು ರವಿಕಿರಣ ಪುಣಚ ತಿಳಿಸಿದ್ದಾರೆ.
ದೇಶಾದ್ಯಂತ ಸುಮಾರು 250 ಸಂಘಟನೆಗಳು ರೈತ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟಕ್ಕೆ ಇಳಿದಿದೆ. ಇದು ಕೊರೋನ ಸಾಂಕ್ರಾಮಿಕ ರೋಗಕ್ಕಿಂತಲೂ ಭಯಾನಕ. ರಾಜ್ಯದಲ್ಲಿ ರೈತರ ಭೂಮಿಯನ್ನು ಕಸಿದುಕೊಳ್ಳಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಭೂಸುಧಾರಣಾ ಕಾಯ್ದೆ ಜಾರಿ ಮಾಡಲಾಗುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಕೆ.ಯಾದವ ಶೆಟ್ಟಿ ಸುದ್ದಿ ಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫರ್ನಾಂಡೀಸ್, ಉಪಾಧ್ಯಕ್ಷ ಅಲ್ವಿನ್ ಮಿನೇಜಸ್, ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ, ರಾಮಣ್ಣ ವಿಟ್ಲ, ಮೆಲ್ವಿನ್ ಸಲ್ದಾನ, ನಾಗೇಶ್ ಮೊದಲಾದವರು ಉಪಸ್ಥಿತರಿದ್ದರು.