ನ್ಯಾ.ಸದಾಶಿವ ಆಯೋಗದ ವರದಿ ಅವೈಜ್ಞಾನಿಕ: ಸಚಿವ ಪ್ರಭು ಚೌಹಾಣ್

ಬೆಂಗಳೂರು, ಸೆ, 3: ಪಂಜಾಬ್ ರಾಜ್ಯದ ವಿರುದ್ಧ ದವಂದರ್ ಸಿಂಗ್ ಪ್ರಕರಣದ ಸುಪ್ರೀಂಕೋರ್ಟ್ ತೀರ್ಪನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡು ಸಮುದಾಯಗಳ ಮಧ್ಯೆ ಸಾಮರಸ್ಯವನ್ನು ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌಹಾಣ್ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚಿನ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಚರ್ಚಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಂಜಾರ, ಭೋವಿ, ಕೊರಚ, ಕೊರಮ, ಅಲೆಮಾರಿ ಸಮುದಾಯದ ಮುಖಂಡರುಗಳೊಂದಿಗೆ ಸಮಾಲೋಚನೆ ನಡೆಸಿದ ಸಚಿವ ಪ್ರಭು ಚೌಹಾಣ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಗೋವಿಂದ ಕಾರಜೋಳ, `ಈ ಪ್ರಕರಣ ಸುಪ್ರೀಂಕೋರ್ಟ್ನಲ್ಲಿದೆ. ಈ ಬಗ್ಗೆ ರಾಜ್ಯ ಸರಕಾರಗಳು ಮಧ್ಯಪ್ರವೇಶ ಮಾಡಲು ಬರುವುದಿಲ್ಲ. ಸದ್ಯಕ್ಕೆ ಯಾವುದೇ ಜಾತಿಗಳಿಗೆ ಅನ್ಯಾಯವಾಗಲು ರಾಜ್ಯ ಸರಕಾರ ಬಿಡುವುದಿಲ್ಲ. ಯಾರು ಆತಂಕ ಪಡುವ ಆಗತ್ಯವಿಲ್ಲ' ಎಂದು ಸ್ಪಷ್ಟನೆ ನೀಡಿದರು.
`ಎಲ್ಲ ಜಾತಿಗಳಿಗೂ ಎಲ್ಲ ವಿಭಾಗದಲ್ಲೂ ಸಮಪಾಲು ಬೇಕಿದೆ. ಅದು ನಮ್ಮ ಸಂವಿಧಾನದ ಆಶಯ. ನ್ಯಾ.ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದೆ. ಇಲ್ಲಿಯವರೆಗೆ ಬಹಿರಂಗವಾಗದಿರುವ ವರದಿಯನ್ನು ಚರ್ಚೆಯಿಲ್ಲದೆ ಶಿಫಾರಸ್ಸು ಮಾಡಿ ಎನ್ನುವುದು ಅಪ್ರಜಾಸತ್ತಾತ್ಮಕ ಕ್ರಮವಾಗಿದೆ. ಸೋರಿಕೆಯಾಗಿರುವ ಈ ವರದಿಯ ಅಂಶಗಳನ್ನು ಗಮನಿಸಿದಾಗ ಇದಂತೂ ವಾಸ್ತವಕ್ಕೆ ದೂರವಾದ ವರದಿ ಎಂದು ತಿಳಿಯುತ್ತದೆ. ಇದು ತುಂಬಾ ಹಳೆಯ ಅಂಕಿ-ಅಂಶಗಳನ್ನು ಒಳಗೊಂಡಿರುವುದರಿಂದ ಇದರ ಚರ್ಚೆ ಈಗ ಅಪ್ರಸ್ತುತ. ಈ ವರದಿಯಿಂದ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಸಿಗುವುದಿಲ್ಲ' ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
`ಸುಪ್ರೀಂ ಕೋರ್ಟ್ನಲ್ಲಿ ಕೆನೆಪದರ ನೀತಿ ಕುರಿತಂತೆ ಪ್ರಸ್ತಾಪಿಸಲಾಗಿದೆ, ಈ ಪ್ರಸ್ತಾವನೆಯು ಜಾರಿಯಾದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಮರಣ ಶಾಸನ ಆಗಬಹುದು. ಈ ಬಗ್ಗೆ ನ್ಯಾಯಾಲಯ ಮತ್ತು ಕಾನೂನು ತಜ್ಞರುಗಳು ಸೂಕ್ತ ಮಾರ್ಗಗಳನ್ನು ಕಂಡುಹಿಡಿಯಬಹುದೆಂದು ಆಶಿಸುತ್ತೇನೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಲ್ಲಿ ಐಕ್ಯತೆ ಬಹುಮುಖ್ಯವಾಗಿದ್ದು ಯಾವುದೇ ಪ್ರಚೋದನೆಗಳಿಗೆ ಒಳಗಾಗದೆ ಸಮಾಜದಲ್ಲಿ ಸಹಬಾಳ್ವೆಯಿಂದ ಇರಲು ಕೋರುತ್ತೇನೆ' ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.







