ಕೋವಿಡ್ ಹಿನ್ನೆಲೆ: ಸರಳ ದಸರಾ ಆಚರಣೆಗೆ ರಾಜ್ಯ ಸರಕಾರ ತೀರ್ಮಾನ
ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ಸಭೆ

ಬೆಂಗಳೂರು, ಸೆ. 8: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಐತಿಹಾಸಿಕ ದಸರಾ ಮಹೋತ್ಸವವನ್ನು ಅತ್ಯಂತ ಸರಳ ರೀತಿಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈಬಿಡದೆ ನಡೆಸಲು ಸರಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ದಸರಾ ಉತ್ಸವ ಸಮಿತಿಯ ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಯಾವುದೇ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.
ದಸರಾ ಉತ್ಸವಕ್ಕೆ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಆಹಾರ ಮೇಳ, ಕ್ರೀಡೆ, ಯುವ ದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು. ಗಜಪಡೆಯನ್ನು ಸಹ ಕನಿಷ್ಠ 5ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಯಿತು. ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ಗಾಗಿ ಶ್ರಮಿಸಿರುವ ಕೊರೋನ ಯೋಧರು, ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಅವರಿಂದ ನೆರವೇರಿಸುವುದು ಎಂದು ತೀರ್ಮಾನಿಸಲಾಯಿತು ಎಂದು ಯಡಿಯೂರಪ್ಪ ತಿಳಿಸಿದರು.
ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು. ಮೈಸೂರು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದು. ಪ್ರಧಾನ ಮಂತ್ರಿಗಳ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯಮಂತ್ರಿ ಸೂಚಿಸಿದರು.
ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎಸ್.ಅಶ್ವತ್ಥನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ.ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಕೆಎಸ್ಟಿಡಿಸಿ ಅಧ್ಯಕ್ಷೆ ಶ್ರುತಿ, ಸರಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಆ ಭಾಗದ ಶಾಸಕರು ಹಾಜರಿದ್ದರು.
ಈ ಬಾರಿ ಸರಳ ದಸರಾ ಆಚರಿಸಲು ತೀರ್ಮಾನ. ಈ ಬಾರಿಯ ಮೈಸೂರು ದಸರಾ ಉದ್ಘಾಟನೆಯನ್ನು 5 ಸದಸ್ಯರು ಮಾಡಲಿದ್ದಾರೆ. ಇದಕ್ಕಾಗಿ ಸರಕಾರ 10 ಕೋಟಿ ರೂ.ಗಳನ್ನು ದಸರಾಕ್ಕೆ ಮೀಸಲಿಡಲಾಗುವುದು. ಕೇವಲ 5, 6 ಆನೆಗಳು ಈ ಬಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಆತ್ಮನಿರ್ಭರ ಪರಿಕಲ್ಪನೆಯಡೆಗೆ ಆದಷ್ಟು ಚೀನೀ ವಸ್ತುಗಳನ್ನು ಬಳಸದೇ ಇರಲು ತೀರ್ಮಾನಿಸಿದೆ. ಈ ಬಾರಿಯ ಮೈಸೂರು ದಸರಾ ಉದ್ಘಾಟನೆಯನ್ನು 5 ಸದಸ್ಯರು ಮಾಡಲಿದ್ದಾರೆ. ದಸರಾ ಉದ್ಘಾಟನೆಯನ್ನು ಕೊರೋನ ಯೋಧರಾದ ವೈದ್ಯರು, ಆಶಾ ಕಾರ್ಯಕರ್ತರು, ಪೌರಕಾರ್ಮಿಕ, ನರ್ಸ್ ಹಾಗೂ ಪೊಲೀಸ್ ಸಿಬ್ಬಂದಿ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರ ಬಳಿ ಕೇಳಲಾಗಿತ್ತು. ಇದಕ್ಕೆ ಸಿಎಂ ಬಿಎಸ್ವೈ ಅವರು ಒಪ್ಪಿಗೆ ನೀಡಿದ್ದಾರೆ'
- ಎಸ್.ಎ.ರಾಮದಾಸ್, ಶಾಸಕ






.jpeg)
.jpeg)
.jpeg)

