ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಘಟಕದಿಂದ 'ಡ್ರಗ್ಸ್ ಮುಕ್ತ ಕರ್ನಾಟಕ' ಅಭಿಯಾನ
![ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಘಟಕದಿಂದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಘಟಕದಿಂದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ](https://www.varthabharati.in/sites/default/files/images/articles/2020/09/12/258856-1599916285.jpg)
ಬೆಂಗಳೂರು, ಸೆ.12: ಸಮಾಜಕ್ಕೆ ಕಂಟಕಪ್ರಾಯವಾಗಿರುವ ಡ್ರಗ್ಸ್ ಜಾಲವನ್ನು ರಾಜ್ಯದಲ್ಲಿ ಬುಡಸಮೇತ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರಿಗೂ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಹಾರ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ಶನಿವಾರ ಬಿಜೆಪಿ ಯುವ ಮೋರ್ಚಾ ಘಟಕದಿಂದ ನಗರದ ಒರಿಯನ್ ಮಾಲ್ ವೃತ್ತದಲ್ಲಿ ಆಯೋಜಿಸಿದ್ದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡ್ರಗ್ಸ್ ಮಾಫಿಯ ಯುವ ಜನತೆಯ ಬದುಕನ್ನೆ ನಾಶ ಮಾಡುತ್ತಿದೆ. ಹೀಗಾಗಿ ಇದನ್ನು ಬಡು ಸಮೇತ ಕಿತ್ತುಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಳ್ಳಲಿ ಎಂದು ತಿಳಿಸಿದರು.
ಈಗಾಗಲೇ ದೇಶದಲ್ಲಿ ಲಕ್ಷಾಂತರ ಮಂದಿ ಯುವಜನತೆ ಈ ಡ್ರಗ್ಸ್ ದಂಧೆಗೆ ಸಿಲುಕಿ ತಮ್ಮ ಬದುಕುಗಳನ್ನೇ ನಾಶ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಾದರೂ ಮಾದಕ ದ್ರವ್ಯಗಳಿಂದ ಯುವ ಜನತೆಯನ್ನು ಪಾರು ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಡ್ರಗ್ಸ್ ಮುಕ್ತ ಕರ್ನಾಟಕ ಎಂಬ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು.
ಈ ಅಭಿಯಾನದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಹರೀಶ್, ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಕೆ.ಬಿ.ವೆಂಕಟೇಶಮೂರ್ತಿ, ಭರತ್ಕುಮಾರ್, ಮಹಿಳಾ ಯುವ ಮೋರ್ಚಾದ ಕವಿತಾ ಮತ್ತಿತರರು ಭಾಗವಹಿಸಿದ್ದರು.
![](https://www.varthabharati.in/sites/default/files/images/galllery/2020/09/12/12BNP (9).jpg)