ಉಡುಪಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಸಸಿ ವಿತರಣೆ

ಉಡುಪಿ, ಸೆ.14: ಮನೆಯಲ್ಲಿಯೇ ತಯಾರಿಸಿದ ಸಾವಯವ ಗೊಬ್ಬರದಿಂದ ಬೆಳೆಯುವ ತರಕಾರಿಗಳ ಸೇವನೆಯಿಂದ ಆರೋಗ್ಯ ಸ್ಥಿರವಾಗಿರುತ್ತದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಸೋಮವಾರ ಉಡುಪಿ ತಾಲೂಕು ಪಂಚಾಯತ್ನಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇದರ ಸಹಯೋಗದಲ್ಲಿ ನಡೆದ ‘ಪೋಷಣ್ ಮಾಸಾಚರಣೆ-2020’ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪೌಷ್ಠಿಕಾಂಶಯುಕ್ತ ಸಸಿಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಿತರಿಸಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.
ಕೈತೋಟ, ತರಕಾರಿ ತೋಟವನ್ನು ಮನೆಯಲ್ಲಿಯೇ ಬೆಳೆಸಿದಲ್ಲಿ ಪೌಷ್ಠಿಕ ಆಹಾರಗಳನ್ನು ಸೇವಿಸಲು ಸಾಧ್ಯವಾಗುತ್ತದೆ. ಇಂದಿನ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಸಿಗುವ ತರಕಾರಿಗಳಲ್ಲಿ ರಾಸಾಯನಿಕ ಮಿಶ್ರಣವಾಗಿದ್ದು, ಇದರಿಂದ ದೇಹದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗಬಹುದು ಎಂದರು.
ಕೋವಿಡ್ ಬಂದ ನಂತರ ಪೌಷ್ಠಿಕಾಂಶ ಆಹಾರದ ಮಹತ್ವ ಜನರಿಗೆ ತಿಳಿದಿದ್ದು, ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು, ವಿದ್ಯಾರ್ಥಿಗಳು,ಸಣ್ಣ ಮಕ್ಕಳಿಗೆ ಪೌಷ್ಠಿಕ ಆಹಾರಗಳ ಮಹತ್ವವನ್ನು ಈ ಪೋಷಣ್ ಅಭಿಯಾನ್ನ ಮುಖಾಂತರ ನೀಡಲಾಗುವುದು ಎಂದರು.
ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಉಪಾಧ್ಯಕ್ಷ ಶರತ್ ಕುಮಾರ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶಿಲ್ಪಾ ರವೀಂದ್ರ, ಕಾರ್ಯ ನಿರ್ವಾಹಣಾಧಿಕಾರಿ ಮೋಹನ್ರಾಜ್ ಹಾಗೂ ವಿವಿಧ ಪಂಚಾಯತ್ಗಳ ಪಿಡಿಓಗಳು ಉಪಸ್ಥಿತರಿದ್ದರು.
ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ ವಿವೇಕಾನಂದ್ ಸಾ್ವಗತಿಸಿ, ಕಾರ್ಯಕ್ರಮ ನಿರೂಪಿಸಿದರು.







