ಬಿ.ಸಿ.ಪಾಟೀಲ್ ರನ್ನು ಸಚಿವ ಸಂಪುಟದಿಂದ ಕೈಬಿಡಲು ಆಗ್ರಹ: ರೈತ ಸಂಘಟನೆಗಳಿಂದ ಧರಣಿ, ಡಿಸಿಗೆ ಮನವಿ
ಹಾವೇರಿ, ಸೆ.14: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಬಿ.ಸಿ.ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಹಾವೇರಿ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರಿಗೆ ಮನವಿ ಸಲ್ಲಿಸಿದರು.
ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತರ ಪರವಾಗಿ ಧ್ವನಿ ಎತ್ತಿ ರೈತರಿಗೆ ಅನುಕೂಲವಾಗುವ ಕೆಲಸ ಮಾಡಿದ್ದಾರೆ. ರೈತರು ಬೆಳೆದ ಬೆಳೆಗೆ ಬೆಲೆ ಸಿಗದಿದ್ದಾಗ ಬೀದಿಗೆ ಇಳಿದು ಹೋರಾಟ ನಡೆಸಿದ್ದಾರೆ, ಇಂಥ ಮುಖಂಡರನ್ನು ಅಜ್ಞಾನಿ ಎಂದು ಕರೆದಿರುವ ಬಿ.ಸಿ.ಪಾಟೀಲ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.
ಪಾಟೀಲ್ ಅವರ ಹೇಳಿಕೆಯಿಂದ ರೈತರ ಮನಸ್ಸಿಗೆ ನೋವಾಗಿದ್ದು, ಈ ಕೂಡಲೇ ಅವರು ರೈತ ಸಂಘದ ಕ್ಷಮೆ ಕೋರಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ರೈತ ಮುಖಂಡರಾದ ರಾಜು ತರ್ಲಘಟ್ಟ, ರುದ್ರಪ್ಪ ಬಳಿಗಾರ, ಎಂ.ಎನ್.ನಾಯಕ ಸೇರಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.





