ಎಚ್.ವಿಶ್ವನಾಥ್ ಸೇರಿ ಮೂವರಿಗೆ ಸಚಿವ ಸ್ಥಾನ ನೀಡದಂತೆ ಪಿಐಎಲ್: ಅ.21ಕ್ಕೆ ನಿರ್ಧರಿಸುವುದಾಗಿ ಹೈಕೋರ್ಟ್ ಹೇಳಿಕೆ

ಬೆಂಗಳೂರು, ಅ.5: ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ಅವರಿಗೆ ಸಚಿವ ಸ್ಥಾನ ನೀಡದಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ಮಧ್ಯಂತರ ಮನವಿಯನ್ನು ಅಕ್ಬೋಬರ್ 21 ರಂದು ನಿರ್ಧರಿಸುವುದಾಗಿ ಹೈಕೋರ್ಟ್ ತಿಳಿಸಿದೆ.
ಬೆಂಗಳೂರಿನ ವಕೀಲ ಎ.ಎಸ್.ಹರೀಶ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದಿಸಿ, ಸುಪ್ರೀಂಕೋರ್ಟ್ ಆದೇಶದಂತೆ ಈ ಮೂವರು ಚುನಾವಣೆಯಲ್ಲಿ ಗೆದ್ದು ಸಚಿವ ಸ್ಥಾನ ಪಡೆಯಬೇಕಿತ್ತು. ಆದರೆ, ಇವರು ಹಿಂಬಾಗಿಲ ಮೂಲಕ ಹುದ್ದೆ ಪಡೆದುಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಯಾವುದೇ ಸಮಯದಲ್ಲಾದರೂ ಅವರು ಸಚಿವ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಮಧ್ಯಂತರ ಮನವಿಯನ್ನು ಶೀಘ್ರವಾಗಿ ಪರಿಗಣಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿ ಇತ್ಯರ್ಥವಾಗುವವರೆಗೆ ಸಚಿವ ಸ್ಥಾನ ನೀಡದಂತೆ ಆದೇಶ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಅಕ್ಟೋಬರ್ 21ರಂದು ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ಮುಂದೂಡಿತು.
ಇದೇ ವೇಳೆ ಸರ್ಕಾರದ ಪರ ಹಾಗೂ ಎಂಟಿಬಿ ಮತ್ತು ಆರ್ ಶಂಕರ್ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ನ್ಯಾಯಾಲಯದ ಸೂಚನೆಯಂತೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದರು. ಇನ್ನು, ಈ ಮೂವರು ನಾಯಕರಿಗೆ ಸಚಿವ ಸ್ಥಾನ ನೀಡದಂತೆ ನಿರ್ದೇಶಿಸಲು ಕೋರಿ ಜಿ. ಮೋಹನ್ ಕುಮಾರ್ ಎಂಬುವರು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆಯೂ ನ್ಯಾಯಾಲಯ ಸೂಚಿಸಿತು. ಹಾಗೆಯೇ, ಈ ಅರ್ಜಿಯನ್ನು ಮೊದಲ ಅರ್ಜಿಯೊಂದಿಗೆ ವಿಚಾರಣೆ ನಡೆಸುವುದಾಗಿ ಸ್ಪಷ್ಟಪಡಿಸಿತು.







