ಕೊರೋನ ಉಲ್ಬಣಕ್ಕೆ ರಾಜ್ಯ ಸರಕಾರದ ಭ್ರಷ್ಟಾಚಾರವೇ ಕಾರಣ: ಸಿದ್ದರಾಮಯ್ಯ ಆರೋಪ

ಬೆಂಗಳೂರು, ಅ.8: ಪ್ರಧಾನಿ ನರೇಂದ್ರ ಮೋದಿ ಸರಕಾರ ಕೊರೋನ ಸೋಂಕಿನಲ್ಲಿ ಭಾರತವನ್ನು ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡುವ ಧಾವಂತದಲ್ಲಿದ್ದರೆ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೋನ ಸೋಂಕಿನಲ್ಲಿ ಕರ್ನಾಟಕವನ್ನು ದೇಶದ ನಂಬರ್ ಒನ್ ಮಾಡುವ ಉತ್ಸಾಹದಲ್ಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಗಾರಿದ್ದಾರೆ.
ಈ ಇಬ್ಬರು ನಾಯಕರು ದೇಶಕ್ಕೆ ಮತ್ತು ರಾಜ್ಯಕ್ಕೆ ಕೊರೋನಕ್ಕಿಂತಲೂ ಅಪಾಯಕಾರಿ. ಕೊರೋನ ಸೋಂಕಿನಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಮಹರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ತಮ್ಮ ದುರಾಡಳಿತದ ಮೂಲಕ ಈ ಜೋಡಿ ದೇಶವನ್ನು ಮತ್ತು ರಾಜ್ಯವನ್ನು ಕೊರೋನ ಸೋಂಕಿನಲ್ಲಿ ಮೊದಲ ಸ್ಥಾನಕ್ಕೇರಿಸಲು ಪಣತೊಟ್ಟಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೋನ ಸೋಂಕು ರಾಜ್ಯದಲ್ಲಿ ಉಲ್ಭಣಗೊಳ್ಳಲು ರಾಜ್ಯ ಸರಕಾರದ ಭ್ರಷ್ಟಾಚಾರವೇ ಕಾರಣ. ಮೊದಲ ದಿನದಿಂದಲೇ ತಪ್ಪು ನೀತಿಗಳು, ಅನಿಶ್ಚಿತ ನಿರ್ಧಾರಗಳು, ತಿದ್ದಿತಿರುಚಿದ ಅಂಕಿಅಂಶಗಳು, ಮುಖ್ಯಮಂತ್ರಿ ಮತ್ತು ಸಚಿವರ ನಿಷ್ಕ್ರಿಯತೆ ಮತ್ತು ಭ್ರಷ್ಟಾಚಾರವೇ ರಾಜ್ಯದ ಇಂದಿನ ದುಸ್ಥಿತಿಗೆ ಕಾರಣ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಪ್ರತಿದಿನ ಕೊರೋನ ಸೋಂಕಿನ ಸರಾಸರಿ 10,000 ಪ್ರಕರಣಗಳು ದಾಖಲಾಗುತ್ತಿವೆ. ಸರಾಸರಿ 100 ಸಾವುಗಳಾಗುತ್ತಿವೆ. ಇಲ್ಲಿಯ ವರೆಗೆ 6.68 ಲಕ್ಷ ಜನರಿಗೆ ಕೊರೋನ ಸೋಂಕು ತಗುಲಿದೆ. 1.16 ಲಕ್ಷಕ್ಕೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪ ಸರಕಾರಕ್ಕೆ ಕೊರೋನ ಸೋಂಕು ಬಡಿದಂತಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನ ಉಲ್ಭಣಗೊಳ್ಳಲು ಜನರ ನಿರ್ಲಕ್ಷ್ಯ ಕಾರಣ ಎಂಬ ಅತಿಪ್ರಚಾರದ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಸರಕಾರ ಕೊರೋನ ನಿಯಂತ್ರಣದಲ್ಲಿನ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ತನ್ನ ಆಡಳಿತದ ವೈಫಲ್ಯದಿಂದಾಗಿ ಖಾಲಿಯಾಗಿರುವ ಖಜಾನೆ ತುಂಬಿಸಲು ಮದ್ಯದಂಗಡಿಯಿಂದ ಮಾಲ್ ವರೆಗೆ, ದೇವಸ್ಥಾನಗಳಿಂದ ಹೊಟೇಲ್ ಗಳ ವರೆಗೆ ಎಲ್ಲವನ್ನು ತೆರೆದಿಟ್ಟ ರಾಜ್ಯ ಸರಕಾರ ಕೊರೋನ ಉಲ್ಬಣಗೊಳ್ಳಲು ಜನತೆಯೇ ಕಾರಣ ಎಂದು ದೂಷಿಸುತ್ತಿರುವುದು ಜನತೆಗೆ ಬಗೆಯುತ್ತಿರುವ ದ್ರೋಹ ಎಂದು ಅವರು ಟೀಕಿಸಿದ್ದಾರೆ .
ಕೊರೋನ ಸೋಂಕಿನಿಂದಾಗಿ ಸಾವು-ನೋವು ಹೆಚ್ಚಲು ಮುಖ್ಯ ಕಾರಣ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯಲ್ಲಿನ ವೈಫಲ್ಯ. ಕೊರೋನ ಸೋಂಕಿತರಿಗೆ ಸರಕಾರಿ ಆಸ್ಪತ್ರೆ ಮೇಲೆ ನಂಬಿಕೆ ಇಲ್ಲ, ಖಾಸಗಿ ಆಸ್ಪತ್ರೆಗೆ ಹೋಗಲು ಕೈಯಲ್ಲಿ ದುಡ್ಡಿಲ್ಲ. ಇದರಿಂದಾಗಿ ಪರೀಕ್ಷೆ ಮಾಡಿಕೊಳ್ಳದೆ, ಸರಿಯಾದ ಚಿಕಿತ್ಸೆ ಪಡೆಯದೆ ನಿರ್ಲಕ್ಷಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಲಾಕ್ ಡೌನ್ ಹೇರಿಕೆಯಿಂದ ಇಲ್ಲಿಯ ವರೆಗೆ ರಾಜ್ಯ ಸರಕಾರಕ್ಕೆ ಕೊರೋನ ನಿಯಂತ್ರಣದ ಬಗ್ಗೆ ಸ್ಪಷ್ಟತೆ ಇಲ್ಲ. ಅಜ್ಞಾನ, ಸುಳ್ಳು ಮತ್ತು ಮತ್ತು ಭ್ರಷ್ಟಾಚಾರ ಕೊರೋನಕ್ಕಿಂತಲೂ ಅಪಾಯಕಾರಿ. ಯಾವ ಖಾಸಗಿ ಆಸ್ಪತ್ರೆಗಳು ಸರಕಾರ ನಿಗದಿಪಡಿಸಿರುವಷ್ಟು ಹಾಸಿಗೆಗಳನ್ನು ನೀಡುತ್ತಿಲ್ಲ, ಸರಕಾರ ನಿಗದಿಪಡಿಸಿರುವ ಚಿಕಿತ್ಸಾ ವೆಚ್ಚದ ಮಿತಿಯನ್ನು ಪಾಲಿಸುತ್ತಿಲ್ಲ. ಸಚಿವರ ಹೇಳಿಕೆಗಳು ಮಾಧ್ಯಮಗಳಿಗಷ್ಟೇ ಸೀಮಿತ ಎಂದು ಸಿದ್ದರಾಮಯ್ಯ ದೂರಿದ್ದಾರೆ.
ರಾಜ್ಯದಲ್ಲಿ ಬಿಬಿಎಂಪಿ ವ್ಯಾಪ್ತಿಯ 303 ಕೊರೋನ ಸೋಂಕಿತರು ಸೇರಿದಂತೆ 841 ಸೋಂಕಿತರು ವೆಂಟಿಲೇಟರ್ ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದರೆ, ತನ್ನ ವ್ಯಾಪ್ತಿಯಲ್ಲಿಯೇ 957 ಸೋಂಕಿತರು ವೆಂಟಿಲೇಟರ್ ನಲ್ಲಿದ್ದಾರೆ ಎಂದು ಬಿಬಿಎಂಪಿ ಹೇಳುತ್ತಿದೆ. ರಾಜ್ಯ ಸರಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಸುಳ್ಳಿನ ಮೊರೆ ಹೋಗುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? ಎಂದು ಅವರು ಪ್ರಶ್ನಿಸಿದ್ದಾರೆ.
ಕಳೆದ ಆರು ತಿಂಗಳಲ್ಲಿ ಕೊರೋನ ನಿಯಂತ್ರಣಕ್ಕೆ ರಾಜ್ಯ ಸರಕಾರ ಕೈಗೊಂಡ ಕ್ರಮಗಳೇನು ಎಂಬುದನ್ನು ಸತ್ಯನಿಷ್ಠವಾಗಿ ಜನತೆಯ ಮುಂದಿಡುವ ಧೈರ್ಯ ಮುಖ್ಯಮಂತ್ರಿಗೆ ಇದೆಯೇ? ಸರಕಾರಿ ಆಸ್ಪತ್ರೆಗಳಲ್ಲಿ ಎಷ್ಟು ಹಾಸಿಗೆ ಸಾಮರ್ಥ್ಯ ಹೆಚ್ಚಿಸಿದ್ದೀರಿ? ಹೊಸದಾಗಿ ಎಷ್ಟು ಆಮ್ಲಜನಕ ಪೂರೈಕೆಯ ಹಾಸಿಗೆಗಳನ್ನು ಮಾಡಿದ್ದೀರಿ? ಹೊಸದಾಗಿ ಖರೀದಿಸಿದ ವೆಂಟಿಲೇಟರ್ ಗಳೆಷ್ಟು? ಎನ್ನುವುದನ್ನು ತಿಳಿಸುವಿರಾ ಮುಖ್ಯಮಂತ್ರಿಗಳೇ? ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ.







