‘ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ವ್ಯಾಪಕ ಪ್ರಚಾರ ಅಗತ್ಯ’

ಉಡುಪಿ, ಅ.9: ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಮೂಲಕ ವ್ಯಾಪಕ ಪ್ರಚಾರ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.
ಶುಕ್ರವಾರ ವಾರ್ತಾ ಇಲಾಖೆಯ ಆಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಪಂಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೋವಿಡ್- 19 ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಪ್ರತಿದಿನ 10,000ಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿವೆ. ಇದನ್ನು ತಡೆಯಲು ಸಾರ್ವಜನಿಕ ರಿಗೆ ಅರಿವು ಮೂಡಿಸುವುದು ಅತೀ ಅವಶ್ಯ ಮಾರ್ಗವಾಗಿದೆ ಎಂದರು.
ಮುನ್ನೆಚ್ಚರಿಕೆ ಕ್ರಮಗಳಾದ ಮುಖಗವಸು ಧರಿಸುವುದು, ಸುರಕ್ಷತಾ ಅಂತರ ಕಾಯ್ದುಕೊಳ್ಳುವುದು, ಅನವಶ್ಯಕವಾಗಿ ವಸ್ತುಗಳನ್ನು ಮುಟ್ಟದಿ ರುವುದು, ಆಗಾಗ ಕೈತೊಳೆಯುವುದು ಸೇರಿದಂತೆ ನೈರ್ಮಲ್ಯ ಕಾಪಾಡಿಕೊಳ್ಳುವ ಬಗ್ಗೆ ಜನರಿಗೆ ಅರಿವು ಮೂಡಿಸಬೇಕಾಗಿದೆ ಎಂದರು.
ಅರಿವು ಮೂಡಿಸುವ ಕಾರ್ಯಕ್ರಮ ಸಮಾಜದ ತಳಮಟ್ಟದಲ್ಲೇ ನಡೆಯ ಬೇಕಾಗಿದೆ. ಇದಕ್ಕಾಗಿ ಮಾಧ್ಯಮಗಳು ಸೇರಿದಂತೆ ಎಲ್ಲಾ ರೀತಿಯ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು, ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಕ ಪ್ರಚಾರ ಗಳನ್ನು ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ನಡೆಸಬೇಕು ಎಂದರು.
ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ. ಹರ್ಷ ಮಾತನಾಡಿ, ಕೋವಿಡ್ ಸೋಂಕು ತಡೆಯಲು ಕೋವಿಡ್ನ ಸರಳ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸುರಕ್ಷತಾ ಅಂತರ ಪಾಲನೆ ಮತ್ತಿತರ ಕ್ರಮಗಳ ಬಗ್ಗೆ ಸ್ಥಳೀಯ ಕೇಬಲ್ ನೆಟ್ವರ್ಕ್ಗಳಲ್ಲಿ ಪ್ರಸಾರ ಮಾಡುವುದರಿಂದ ಹೆಚ್ಚು ಪರಿಣಾಮಕಾರಿ ಯಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಲು ಸಾಧ್ಯವಾಗುತ್ತದೆ ಎಂದ ಅವರು ಇದಕ್ಕಾಗಿ ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಕೋವಿಡ್ ಬಗ್ಗೆ ಸುಳ್ಳು ಸುದ್ದಿಗಳು ಹರಡುತ್ತಿವೆ. ಅವುಗಳ ಬಗ್ಗೆ ಸ್ಪಷ್ಟೀಕರಣ ನೀಡುವುದರ ಜೊತೆಗೆ, ಕೋವಿಡ್ ಪಾಸಿಟಿವ್ ಬಂದು ಚಿಕಿತ್ಸೆಯಿಂದ ಗುಣಮುಖರಾದ ರೋಗಿಗಳ ಯಶೋಗಾಥೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಕೆಲಸವೂ ಆಗಬೇಕಾಗಿದೆ ಎಂದರು.
ವೀಡಿಯೋ ಕಾನ್ಫರೆನ್ಸ್ನಲ್ಲಿ ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ಪಾಂಡೆ, ಆರೋಗ್ಯ ಅಭಿಯಾನ ನಿರ್ದೇಶಕಿ ಅರುಂಧತಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಡಿಹೆಚ್ಓ ಡಾ.ಸುಧೀೀರ್ ಚಂದ್ರ ಸೂಡಾ, ಕೋವಿಡ್ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ್ ಮತ್ತಿತರರು ಉಪಸ್ಥಿತರರಿದ್ದರು.








