ಉತ್ತರ ಪ್ರದೇಶ: ಅರ್ಚಕನ ಮೇಲೆ ಗುಂಡಿನ ದಾಳಿ
ಲಕ್ನೊ, ಅ.11: ಭೂಮಿಯ ವಿವಾದಕ್ಕೆ ಸಂಬಂಧಿಸಿ ದೇವಸ್ಥಾನದ ಅರ್ಚಕರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ತೀವ್ರ ಗಾಯಗೊಂಡ ಅರ್ಚಕರ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಗೊಂಡ ಜಿಲ್ಲೆಯ ಎಥಿಯಾಟಕ್ ಕೊತ್ವಾಲಿ ಪ್ರದೇಶದ ರಾಮಜಾನಕಿ ದೇವಸ್ಥಾನದ ಅರ್ಚಕ ಸಮರ್ಥ ದಾಸ್ ಎಂಬವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಅರ್ಚಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದಾಳಿಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದ್ದು ಇನ್ನಿಬ್ಬರು ಆರೋಪಿಗಳ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ. ಭೂಮಿಗೆ ಸಂಬಂಧಿಸಿದ ವಿವಾದ ಘಟನೆಗೆ ಕಾರಣ ಎಂದು ಪೊಲೀಸ್ ಅಧಿಕಾರಿ ಶೈಲೇಶ್ ಕುಮಾರ್ ಪಾಂಡೆ ಹೇಳಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು ಕ್ರಿಮಿನಲ್ಗಳಿಗೆ ಪೊಲೀಸರ ಹೆದರಿಕೆಯೇ ಇಲ್ಲದಂತಾಗಿದೆ. ಉತ್ತರಪ್ರದೇಶದಲ್ಲಿ ಜಂಗಲ್ರಾಜ್ ವ್ಯವಸ್ಥೆ ಇರುವಂತೆ ಕಾಣುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅನುರಾಗ್ ಭದೌರಿಯಾ ಟೀಕಿಸಿದ್ದಾರೆ.