ಸಚಿವ ಸಂಪುಟದಲ್ಲಿ ಬದಲಾವಣೆ: ಶ್ರೀರಾಮುಲುಗೆ ಸಮಾಜ ಕಲ್ಯಾಣ, ಡಾ.ಸುಧಾಕರ್ ಗೆ ಆರೋಗ್ಯ ಇಲಾಖೆ ಹೊಣೆ
![ಸಚಿವ ಸಂಪುಟದಲ್ಲಿ ಬದಲಾವಣೆ: ಶ್ರೀರಾಮುಲುಗೆ ಸಮಾಜ ಕಲ್ಯಾಣ, ಡಾ.ಸುಧಾಕರ್ ಗೆ ಆರೋಗ್ಯ ಇಲಾಖೆ ಹೊಣೆ ಸಚಿವ ಸಂಪುಟದಲ್ಲಿ ಬದಲಾವಣೆ: ಶ್ರೀರಾಮುಲುಗೆ ಸಮಾಜ ಕಲ್ಯಾಣ, ಡಾ.ಸುಧಾಕರ್ ಗೆ ಆರೋಗ್ಯ ಇಲಾಖೆ ಹೊಣೆ](https://www.varthabharati.in/sites/default/files/images/articles/2020/10/12/262992-1602502918.jpg)
ಬೆಂಗಳೂರು, ಅ. 12: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೆಲ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದು, ಬಿ.ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದ್ದು, ಡಾ.ಕೆ.ಸುಧಾಕರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಏರಿಕೆ ಹಿನ್ನೆಲೆಯಲ್ಲಿ ವೈಜ್ಞಾನಿಕ ಮಾಹಿತಿಯೊಂದಿಗೆ ವೈದ್ಯರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವ ಸಾಮರ್ಥ್ಯವಿದ್ದರೆ ಮಾತ್ರ ಸೋಂಕಿನ ನಿಯಂತ್ರಣ ಮತ್ತು ನಿರ್ವಹಣೆ ಸುಲಭವಾಗಬಲ್ಲದು ಎಂಬ ಕಾರಣದಿಂದಾಗಿ ಬಿ.ಶ್ರೀರಾಮುಲು ಅವರ ಬಳಿ ಇದ್ದ ಆರೋಗ್ಯ ಇಲಾಖೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.
ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರ ಬಳಿ ಇದ್ದ ಸಮಾಜ ಕಲ್ಯಾಣ ಇಲಾಖೆಯನ್ನು ಹಿಂಪಡೆದು ಅದನ್ನು ಶ್ರೀರಾಮುಲು ಅವರಿಗೆ ನೀಡಲಾಗಿದೆ. ಅಲ್ಲದೆ, ಕಾರಜೋಳ ಅವರಿಗೆ ಲೋಕೋಪಯೋಗಿ (ಪಿಡಬ್ಲ್ಯೂಡಿ) ಖಾತೆಯನ್ನು ನೀಡಿದ್ದು, ರಾಮುಲು ಅವರ ಬಳಿ ಇದ್ದ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಬಿ.ಶ್ರೀರಾಮುಲು, ಡಾ.ಸುಧಾಕರ್ ಅವರ ಖಾತೆ ಬದಲಾವಣೆ ಕಡತಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಕಿತ ಹಾಕಿದ್ದಾರೆ.
ಉಪಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಶ್ರೀರಾಮುಲು ಅವರಿಗೆ ಆರೋಗ್ಯ ಖಾತೆ ನೀಡಲಾಗಿತ್ತು. ಇದೀಗ ಆ ಖಾತೆಯನ್ನು ಹಿಂಪಡೆದಿದ್ದು, ಅದಕ್ಕಿಂತ ಹೆಚ್ಚು ಮಹತ್ವದ ಸಮಾಜ ಕಲ್ಯಾಣ ಖಾತೆಯನ್ನು ಶ್ರೀರಾಮುಲು ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನೀಡಿದ್ದಾರೆ. ಆದರೆ, ಇದು ಸರಕಾರ ಹಾಗೂ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅಸಮಾಧಾನ: `ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಮಿತಿ ಮೀರುತ್ತಿರುವ ಈ ಸಂಕಷ್ಟದ ಅವಧಿಯಲ್ಲಿ ನನ್ನ ಖಾತೆ ಬದಲಾವಣೆ ಮಾಡಿದರೆ ಸಾರ್ವಜನಿಕರಲ್ಲಿ ನಾನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ನಿಭಾಯಿಸಲು ಅಸಮರ್ಥ ಎಂಬ ಮನೋಭಾವ ಬರುತ್ತದೆ' ಎಂದು ಶ್ರೀರಾಮುಲು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದು, ಈ ಬಗ್ಗೆ ಸಿಎಂ ಬಳಿ ಸಮಾಲೋಚನೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆಂದು ಗೊತ್ತಾಗಿದೆ.
ಕೊರೋನ ಬಿಕ್ಕಟ್ಟಿನ ನಡುವೆ ಸಾರ್ವಜನಿಕರು ಮತ್ತು ಪ್ರವಾಸಿಗರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ಕೈಗೊಳ್ಳಬೇಕಾಗಿರುವ ಮುಂಜಾಗೃತಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು'
-ಡಾ.ಕೆ.ಸುಧಾಕರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ