ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ನೇಮಕ ಕಾನೂನು ಬಾಹಿರ: ಸರಕಾರದ ಮುಖ್ಯ ಕಾರ್ಯದರ್ಶಿಗೆ ದೂರು
ಬೆಂಗಳೂರು, ಅ.13: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ನೇಮಕ ಕಾನೂನು ಬಾಹಿರ ಎಂದು ಆರೋಪಿಸಿ ನ್ಯಾಯವಾದಿ ಎಸ್.ಉಮಾಪತಿ, ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ದೂರು ಸಲ್ಲಿಸಿದ್ದಾರೆ.
ಎನ್.ಆರ್.ಸಂತೋಷ್ ಅವರನ್ನು ಕಾನೂನು ಬಾಹಿರವಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ. ನಿಯಮದ ಪ್ರಕಾರ ಖಾಸಗಿ ವ್ಯಕ್ತಿಗೆ ಮುಖ್ಯಮಂತ್ರಿ ಕಾರ್ಯದರ್ಶಿ ಹುದ್ದೆಯನ್ನು ನೀಡುವಂತಿಲ್ಲ. ಅಷ್ಟೇ ಅಲ್ಲದೆ, ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡುವಂತಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆಪ್ತರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸುವ ಮೂಲಕ ಮುಖ್ಯಮಂತ್ರಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ.ಅಲ್ಲದೆ, ಸಂಪುಟ ದರ್ಜೆ ಸ್ಥಾನಮಾನ ನೀಡಿರುವುದರಿಂದ ಅವರು ಸರಕಾರದ ಪ್ರಮುಖ ಕಡತಗಳನ್ನು ಪರಿಶೀಲಿಸಬಹುದಾಗಿದೆ ಎಂದು ದೂರಿದ್ದಾರೆ.
ಈ ಸಂಬಂಧ 15 ದಿನಗಳಲ್ಲಿ ಸ್ಪಷ್ಟೀಕರಣ ನೀಡುವಂತೆ ದೂರಿನಲ್ಲಿ ಹೇಳಲಾಗಿದ್ದು, ಒಂದು ವೇಳೆ ಪ್ರತಿಕ್ರಿಯೆ ನೀಡದೇ ಇದ್ದಲ್ಲಿ ನೇಮಕಾತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.