ಕೋವಿಡ್ ಮಾರ್ಗಸೂಚಿ ಪಾಲಿಸಿ: ನ್ಯಾ.ಮುರಳೀಧರ್ ಪೈ

ಮಂಗಳೂರು, ಅ.14: ಕೊರೋನ ಸೋಂಕು ಹರಡುವಿಕೆ ತಡೆಯಲು ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಪಾಡಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಸೇವಾ ಪ್ರಾಧಿಕಾರದ ಅಧ್ಯಕ್ಷ ಮುರಳೀಧರ್ ಪೈ ಬಿ. ತಿಳಿಸಿದ್ದಾರೆ.
ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಆವರಣದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ ಕೋವಿಡ್-19 ಜನಾಂ ದೋಲನ ಕಾರ್ಯಕ್ರಮದಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಸಂಚಾರಿ ಆಟೊಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡುತ್ತಿದ್ದರು.
ಸರಕಾರವು ಕೋವಿಡ್-19ರ ಬಗ್ಗೆ ಮಾರ್ಗಸೂಚಿಗಳನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಸೋಂಕು ತಡೆಗಟ್ಟಲು ಸರಳ ಮಾರ್ಗಗಳಾದ ಮುಖಗವಸು ಧರಿಸುವುದು, ಸುರಕ್ಷಿತ ಅಂತರ ಕಾಪಾಡುವುದು, ಪದೇಪದೇ ಕೈ ತೊಳೆಯುವುದು, ಅಸ್ವಚ್ಛತಾ ಸ್ಥಳಗಳನ್ನು ಮುಟ್ಟದಿರುವುದು ಸೇರಿದಂತೆ ಇತರ ಸೂಚನೆಗಳನ್ನು ಪಾಲಿಸಿದಲ್ಲಿ ಕೊರೋನ ಸೋಂಕಿನಿಂದ ದೂರವಾಗಲು ಸಾಧ್ಯವಾಗುತ್ತದೆ ಎಂದರು.
ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋವಿಡ್-19 ಬಗ್ಗೆ ಸುಳ್ಳು ಸುದ್ದಿಗಳು ಹರಡುತ್ತಿವೆ. ಇವುಗಳ ಬಗ್ಗೆ ಜನರು ಕಿವಿಗೊಡದೆ ಸರಕಾರ ಸೂಚಿಸುವ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ನ್ಯಾಯಾಧೀಶರು ಸಾರ್ವಜನಿಕರು, ಅಧಿಕಾರಿಗಳು ಹಾಗೂ ಸ್ವಯಂ ಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಅರೆಕಾಲಿಕ ಸ್ವಯಂ ಸೇವಕರು ಸಾರ್ವಜನಿಕರಿಗೆ ಮಾಸ್ಕ್ಗಳನ್ನು ಉಚಿತವಾಗಿ ವಿತರಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ, ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಎ.ಜಿ., ನ್ಯಾಯವಾದಿ ಸಂಘದ ಅಧ್ಯಕ್ಷ ನರಸಿಂಹ ಹೆಗ್ಡೆ ಮತ್ತಿತರು ಉಪಸ್ಥಿತರಿದ್ದರು.







