ಆರ್ಆರ್ ನಗರ ಉಪಚುನಾವಣೆ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನಿಯೋಜನೆ
ಬೆಂಗಳೂರು, ಅ.30: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಸಲುವಾಗಿ ಪೊಲೀಸ್ ಬಿಗಿ ಭದ್ರತೆ ಜತೆಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
ಆರ್ಆರ್ ನಗರ ವ್ಯಾಪ್ತಿಯ ಪಶ್ಚಿಮ ವಿಭಾಗದ 5, ಉತ್ತರ ವಿಭಾಗದ 8 ಪೊಲೀಸ್ ಠಾಣೆಗಳ ವ್ಯಾಪ್ತಿಯ ಸೂಕ್ಷ್ಮ ಅತಿ ಸೂಕ್ಷ್ಮ ಪ್ರದೇಶದಲ್ಲಿ ಕೈಗಾರಿಕಾ ಭದ್ರತಾ ಪಡೆಯ ತುಕಡಿಗಳನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಉತ್ತರ ವಿಭಾಗದ ಪೊಲೀಸ್ ಠಾಣೆಗಳಿಗೆ ಅ.30ರಿಂದ ಹೆಚ್ಚುವರಿಯಾಗಿ 10 ಇನ್ಸ್ಪೆಕ್ಟರ್ ಗಳು 36 ಸಬ್ಇನ್ಸ್ಪೆಕ್ಟರ್ ಗಳು, 200 ಕಾನ್ಸ್ಟೇಬಲ್ ಮತ್ತು ಹೆಡ್ ಕಾನ್ಸ್ಟೇಬಲ್ಗಳು, 4 ಕೆಎಸ್ಆರ್ಪಿ, 3 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
ಅದೇ ರೀತಿ, ಪಶ್ಚಿಮ ವಿಭಾಗದ ಐದು ಪೊಲೀಸ್ ಠಾಣೆಗಳಿಗೆ ಕೇಂದ್ರ ಭದ್ರತಾ ಪಡೆಯ ತುಕ್ಕಡಿಗಳನ್ನು ನಿಯೋಜಿಸಲಾಗಿದೆ. ಈ ಮೂಲಕ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು. ಶಾಂತಿಯುತ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.





