'ಸೇರೋ' ಸಮೀಕ್ಷೆ ಪ್ರಕಾರ ರಾಜ್ಯದ ಶೇ.16ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ: ಸಚಿವ ಸುಧಾಕರ್

ಬೆಂಗಳೂರು, ನ. 4: ಕರ್ನಾಟಕ ರಾಜ್ಯದಲ್ಲಿ ಶೇ.16ರಷ್ಟು ಜನರಲ್ಲಿ ಕೋವಿಡ್-19 ಸೋಂಕಿನ ಪ್ರತಿಕಾಯ ಇದೆ ಎಂಬ ಅಂಶ 'ಸೆರೋ' ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಇಂದಿಲ್ಲಿ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈ, ಪುಣೆ, ದಿಲ್ಲಿ ನಗರ ಸೇರಿದಂತೆ ಕೆಲ ಸ್ಥಳಗಳಲ್ಲಿ ಸರ್ವೆ ಮಾಡಲಾಗಿದೆ. ಆದರೆ, ಕರ್ನಾಟಕದಲ್ಲಿ ಎಲ್ಲ 30 ಜಿಲ್ಲೆಗಳಲ್ಲೂ ಸರ್ವೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಎಂಟು ವಲಯಗಳಲ್ಲೂ ನಡೆದಿದೆ. 16,585 ಜನರ ಮಾದರಿಗಳನ್ನು ಪಡೆದು ಪರೀಕ್ಷೆ ಮಾಡಿದ್ದು, 15,624 ಜನರ ಫಲಿತಾಂಶ ಬಂದಿದೆ. ಹಿಂದೆ ಹಾಗೂ ಸರ್ವೆ ಮಾಡುವ ಸಮಯದಲ್ಲಿ ಸೋಂಕಿಗೆ ಒಳಗಾಗಿದ್ದವರ ಒಟ್ಟು ಪ್ರಮಾಣ ಶೇ.27.3ರಷ್ಟಿದೆ ಎಂದು ಮಾಹಿತಿ ನೀಡಿದರು.
ಕಡಿಮೆ ರಿಸ್ಕ್, ಮಧ್ಯಮ ರಿಸ್ಕ್ ಮತ್ತು ಹೆಚ್ಚು ರಿಸ್ಕ್ ಎಂದು ವರ್ಗೀಕರಣ ಮಾಡಿ ಪರೀಕ್ಷೆ ನಡೆಸಲಾಗಿದೆ. ಕೋವಿಡ್ ವೈರಸ್ ದೇಹಕ್ಕೆ ಬಂದಾಗ ಪ್ರತಿರೋಧಕವಾಗಿ ಐಜಿಜಿ ಉತ್ಪತ್ತಿಯಾಗುತ್ತದೆ. ಐಜಿಜಿ ಹೊಂದಿದವರು ಹಾಗೂ ಸಕ್ರಿಯ ಸೋಂಕಿತರನ್ನು ಪತ್ತೆ ಮಾಡುವ ಮೂಲಕ ಈ ಸರ್ವೆಯನ್ನು ಕ್ರಮಬದ್ಧವಾಗಿ ನಡೆಸಲಾಗಿದೆ ಎಂದು ಡಾ.ಕೆ.ಸುಧಾಕರ್ ಇದೇ ವೇಳೆ ವಿವರಿಸಿದರು.
15,624 ಜನರಲ್ಲಿ ಐಜಿಜಿ ಪ್ರತಿಕಾಯ ಇರುವವರ ಪ್ರಮಾಣ ಶೇ.16ರಷ್ಟಿದೆ. ಅಂದರೆ ಇಷ್ಟು ಜನರು ಸೋಂಕಿಗೊಳಗಾಗಿ ಗುಣಮುಖರಾಗಿದ್ದಾರೆ. ಈ ಪ್ರಮಾಣ ದಿಲ್ಲಿಯಲ್ಲಿ ಶೇ.29ರಷ್ಟು, ಮುಂಬೈ ಕೊಳಗೇರಿ ರಹಿತ ಪ್ರದೇಶಗಳಲ್ಲಿ ಶೇ.16ರಷ್ಟು ಹಾಗೂ ಕೊಳಚೆ ಪ್ರದೇಶಗಳಲ್ಲಿ ಶೇ.57ರಷ್ಟು, ಪುಣೆಯ 5 ಪ್ರದೇಶಗಳಲ್ಲಿ ಶೇ.36.1 ರಿಂದ ಶೇ.65.4ರಷ್ಟು, ಇಂದೋರ್ ನಲ್ಲಿ ಶೇ.7.8, ಪಾಂಡಿಚೆರಿಯಲ್ಲಿ ಶೇ.22.7, ಚೆನ್ನೈನಲ್ಲಿ ಶೇ.32.3ರಷ್ಟಿದೆ. 15,624 ಜನರಲ್ಲಿ ಸಕ್ರಿಯ ಸೋಂಕಿತರ ಪ್ರಮಾಣ ಶೇ.12.7ರಷ್ಟಿದೆ ಎಂದು ಡಾ.ಸುಧಾಕರ್ ತಿಳಿಸಿದರು.
ಈ ಸರ್ವೆ 2020ರ ಸೆಪ್ಟೆಂಬರ್ 3 ರಿಂದ 16ರ ವರೆಗೆ ನಡೆದಿತ್ತು. ಕೋವಿಡ್ ಮರಣ ಪ್ರಮಾಣವನ್ನು ಸೋಂಕಿಗೆ ಒಳಗಾದ ಒಟ್ಟು ಜನರಿಗೆ ಹೋಲಿಸಿದರೆ, ಬಹಳ ಕಡಿಮೆ ಇದೆ. ರಾಜ್ಯದಲ್ಲಿ ಮರಣ ಪ್ರಮಾಣ ಶೇ.0.05ರಷ್ಟಿದೆ. ಮುಂಬೈಯಲ್ಲಿ ಶೇ.0.05-0.10, ಪುಣೆಯಲ್ಲಿ ಶೇ.0.08, ದಿಲ್ಲಿಯಲ್ಲಿ ಶೇ.0.09, ಚೆನ್ನೈನಲ್ಲಿ ಶೇ.0.13ರಷ್ಟು ಮರಣ ಪ್ರಮಾಣವಿದೆ ಎಂದು ಅವರು ವಿವರಣೆ ನೀಡಿದರು.
ಇದೇ ರೀತಿ ಡಿಸೆಂಬರ್ ಅಂತ್ಯದಲ್ಲಿ ಒಂದು ಹಾಗೂ ಮಾರ್ಚ್ ಅಂತ್ಯಕ್ಕೆ ಮತ್ತೊಂದು ಸರ್ವೆ ನಡೆಸಲಾಗುವುದು ಎಂದು ಅವರು ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಕೋವಿಡ್ ಸರ್ವೆ ಸಮಿತಿಯ ಮುಖ್ಯಸ್ಥ ಡಾ.ಗಿರಿಧರ ಬಾಬು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
ಕೋವಿಡ್ ಹೆಚ್ಚು ಪರೀಕ್ಷೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು, ಚಿಕಿತ್ಸೆಯ ಗುಣಮಟ್ಟ ಹೆಚ್ಚಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಜಾರಿ ಮಾಡಲು ಈ ಸರ್ವೆ ನೆರವಾಗಲಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಬಹಳ ಕಡಿಮೆ ಇದೆ. ಗುಣಮುಖರ ಪ್ರಮಾಣ ಶೇ.95ರಷ್ಟಿದೆ. ಅಲ್ಲದೆ, ಕೋವಿಡ್ ಸೋಂಕಿಗೊಳಗಾಗಿ ಗುಣಮುಖರಾದವರ ಆರೋಗ್ಯದ ನಿಗಾ ಇರಿಸಲು ಪುನರ್ವಸತಿ ಕೇಂದ್ರ ಆರಂಭಿಸಲಾಗುವುದು'
-ಡಾ.ಕೆ.ಸುಧಾಕರ್, ಆರೋಗ್ಯ ಸಚಿವ







