ವಿದ್ಯುತ್ ದರ ಏರಿಕೆ ಹಿಂಪಡೆಯುವಂತೆ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

File Photo
ಬೆಂಗಳೂರು, ನ.6: ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆಇಆರ್ಸಿ)ವು ಮಾಡಿದ್ದ ಶಿಫಾರಸ್ಸುಗಳನ್ನು ಅಂಗೀಕರಿಸಿ ರಾಜ್ಯ ಸರಕಾರವು ನ.1ರಿಂದ ವಿದ್ಯುತ್ ದರಗಳನ್ನು ಏರಿಕೆ ಮಾಡಿದೆ. ಕೊರೋನ ಕಾರಣದಿಂದಾಗಿ ರಾಜ್ಯದಲ್ಲಿ ಉತ್ಪಾದನಾ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಿವೆ. ಜನ ಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದ್ದಾರೆ. ಜನರ ಬಳಿ ಹಣ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಇಂಧನದ ದರ ಮತ್ತು ವಿದ್ಯುತ್ ದರಗಳ ಏರಿಕೆಯಿಂದ ನೇರವಾಗಿ ಜನರ ಜೇಬಿಗೆ ಹೊರೆಯಾಗುವ ಪ್ರಮುಖ ಸಂಗತಿಗಳು. ಹಾಗೇ ನೋಡಿದರೆ ಈ ವರ್ಷ ದರಗಳನ್ನು ಕಡಿಮೆ ಮಾಡಬೇಕಾದ ಅಗತ್ಯವಿದೆ. ಪೆಟ್ರೋಲ್, ಡಿಸೇಲ್ ಮತ್ತು ವಿದ್ಯುಚ್ಛಕ್ತಿ ದರ ಕಡಿಮೆ ಮಾಡಿದರೆ ಮಾರುಕಟ್ಟೆಯಲ್ಲಿ ಆರ್ಥಿಕ ಚೈತನ್ಯ ಬರುತ್ತದೆ. ಆದರೆ ರಾಜ್ಯ ಸರಕಾರ ವಿವೇಚನಾರಹಿತವಾಗಿ ವಿದ್ಯುಚ್ಛಕ್ತಿ ದರಗಳನ್ನು ಏರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ಶೇ.25 ರಷ್ಟು ಏರಿಕೆ ಮಾಡಲಾಗಿದೆ. ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯೂ ಸೇರಿ ಸರಾಸರಿ ಶೇ.17.15ರಷ್ಟು ಏರಿಕೆ ಆಗಿದೆ. ಸಾರ್ವಜನಿಕ ಕುಡಿಯುವ ನೀರಿಗೆ ಸರಬರಾಜು ಮಾಡುವ ವಿದ್ಯುತ್ ಗರಿಷ್ಠ ರೂ. 5.20 ರಿಂದ 5.45ಕ್ಕೆ ಏರಿಕೆ ಮಾಡಲಾಗಿದೆ. ಗೃಹ ಬಳಕೆಗೆ ಗರಿಷ್ಠ ರೂ.7.80 ರಿಂದ 8.05ಕ್ಕೆ ಏರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅದೇ ರೀತಿ ವಾಣಿಜ್ಯ ಬಳಕೆಗೆ ರೂ.9 ರಿಂದ 9.25ಗೆ ಏರಿಕೆ ಆಗಿದೆ. ಕೈಗಾರಿಕೆಗಳಲ್ಲಿ ರೂ.6.90 ರಿಂದ 7.20 ವರೆಗೆ ಏರಿಕೆ ಮಾಡಲಾಗಿದೆ. ಜನ ಕಷ್ಟಕಾಲದಲ್ಲಿರುವಾಗ ಪೆಟ್ರೊಲ್, ಡಿಸೇಲ್ ಬೆಲೆ ವಿದ್ಯುತ್ ದರ ಏರಿಕೆ ಮಾಡುವುದು ವಿವೇಚನಾರಹಿತ ಆಡಳಿತ ಮಾದರಿಗೆ ಉದಾಹರಣೆಯಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು 150 ರಿಂದ 200 ಮಿಲಿಯನ್ ಯುನಿಟ್ಗಳಷ್ಟು ವಿದ್ಯುಚ್ಛಕ್ತಿಗೆ ಬೇಡಿಕೆ ಇದೆ. ಇದರಲ್ಲಿ ಶೇ.40 ರಿಂದ 50 ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಾದ ಸೌರ ಮತ್ತು ಪವನ ವಿದ್ಯುತ್ ಮೂಲಗಳಿಂದ ಉತ್ಪಾದನೆಯಾಗುತ್ತಿದೆ. ಕರ್ನಾಟಕ ರಾಜ್ಯವು ಕೇಂದ್ರ ಸರಕಾರ ನಿಗದಿಪಡಿಸಿರುವ ಮಾನದಂಡಗಳಿಗಿಂತ ಮೂರು ಪಟ್ಟು ಹೆಚ್ಚಿನ ವಿದ್ಯುತ್ತನ್ನು ನವೀಕರಿಸಿಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ದೇಶದ ಅನೇಕ ರಾಜ್ಯಗಳು ಇನ್ನು ಕಲ್ಲಿದ್ದಲು ಆಧರಿಸಿದ ವಿದ್ಯುತ್ ಉತ್ಪಾದನೆಯಲ್ಲಿ ತೊಡಗಿವೆ. ಕೇಂದ್ರ ಸರಕಾರದ ಎನ್.ಟಿ.ಪಿ.ಸಿ. ಘಟಕಗಳು ಕೂಡ ಕಲ್ಲಿದ್ದಲು ಆಧರಿಸಿದ ವಿದ್ಯುತ್ ಉತ್ಪಾದನೆಯಲ್ಲಿ ತೊಡಗಿವೆ. ಕಾಂಗ್ರೆಸ್ ಸರಕಾರವಿದ್ದಾಗ ಅಳವಡಿಸಿಕೊಂಡ ವಿದ್ಯುತ್ ನೀತಿಗಳಿಂದಾಗಿ ಕರ್ನಾಟಕ ರಾಜ್ಯವು ವಿದುಚ್ಛಕ್ತಿ ಉತ್ಪಾದನೆಯಲ್ಲಿ ಸಂಪೂರ್ಣ ಸ್ವಾವಲಂಬನೆಯನ್ನು ಸಾಧಿಸಿದೆ. ಅದಕ್ಕೂ ಮೊದಲು ಅನ್ಯ ರಾಜ್ಯಗಳು ಮತ್ತು ಕೇಂದ್ರ ಸರಕಾರದ ಬಳಿ ವಿದ್ಯುತ್ಗಾಗಿ ಮೊರೆ ಇಡಬೇಕಾದ ಪರಿಸ್ಥಿತಿ ಇತ್ತು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್ತನ್ನು ಬಳಸಿಕೊಂಡು ಹೆಚ್ಚುವರಿ ವಿದ್ಯುತ್ತನ್ನು ಬೇರೆ ರಾಜ್ಯಗಳಿಗೆ ಮಾರಬಹುದಾದಷ್ಟು ಉತ್ಪಾದನೆ ಮಾಡುತ್ತಿದ್ದೇವೆ. ಕಳೆದ ಏಳೆಂಟು ತಿಂಗಳಿಂದೀಚೆಗೆ ರಾಯಚೂರಿನ ಥರ್ಮಲ್ ವಿದ್ಯುತ್ ಉತ್ಪಾದನಾ ಘಟಕಗಳನ್ನು (ಆರ್.ಟಿ.ಪಿ.ಎಸ್) ರಾಜ್ಯ ಸರಕಾರ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುರಂತವೆಂದರೆ ಇದೇ ಸಂದರ್ಭದಲ್ಲಿ ರಾಜ್ಯ ಸರಕಾರ ಕೇಂದ್ರ ಸರಕಾರದಿಂದ ಪ್ರತಿ ಯುನಿಟ್ಗೆ 50 ಪೈಸೆಗಳನ್ನು ಹೆಚ್ಚಿಗೆ ನೀಡಿ ವಿದ್ಯುತ್ ಖರೀದಿ ಮಾಡುತ್ತಿದೆ. ರಾಜ್ಯದಲ್ಲೂ ಪ್ರಮುಖ ಖಾಸಗಿ ವ್ಯಕ್ತಿಗಳು ವಿದ್ಯುತ್ತನ್ನು ಉತ್ಪಾದಿಸುವ ಪ್ರಮಾಣ ಹೆಚ್ಚಿಸುತ್ತಿದ್ದಾರೆ. ಇದರಿಂದಾಗಿ ರಾಜ್ಯದ ಜನರ ಹಣ ವಾರ್ಷಿಕವಾಗಿ ಸುಮಾರು 5 ರಿಂದ 6 ಸಾವಿರ ಕೋಟಿ ರೂ.ಗಳಷ್ಟು ಬೇಕಾಬಿಟ್ಟಿಯಾಗಿ ಕೇಂದ್ರ ಸರಕಾರಕ್ಕೆ ನೀಡಲಾಗುತ್ತಿದೆ. ಇದರ ಜೊತೆಯಲ್ಲಿ ರಾಜ್ಯ ಸರಕಾರವು ಬೆಸ್ಕಾಂಗೆ 3,361 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದೆ. ರಾಜ್ಯದ ಉಳಿದ ಎಸ್ಕಾಂಗಳ ಕಥೆಯೂ ಇದೇ ರೀತಿ ಇದೆ ಎಂದು ಅವರು ತಿಳಿಸಿದ್ದಾರೆ.
ಈ ವರ್ಷ ರಾಜ್ಯದ ಎಲ್ಲ ಜಲಾಶಯಗಳು ತುಂಬಿವೆ. ಮತ್ತು ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಲಭಿಸುತ್ತಿದೆ. ಈ ಮೂಲಗಳಿಂದ ವಿದ್ಯುತ್ ಅನ್ನು ಪಡೆದು ಜನರಿಗೆ ಸರಬರಾಜು ಮಾಡಬಹುದಾಗಿದೆ. ಕೇಂದ್ರ ಸರಕಾರಕ್ಕೆ ಅನಾವಶ್ಯಕವಾಗಿ ನೀಡುತ್ತಿರುವ ಹಣವನ್ನು ತಪ್ಪಿಸಿದರೆ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 5 ರಿಂದ 6 ಸಾವಿರ ಕೋಟಿ ರೂ. ಗಳನ್ನು ಉಳಿಸಿ ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡಬಹುದಾಗಿದೆ. ಅಗತ್ಯವಿದ್ದರೆ ರಾಯಚೂರಿನ ಆರ್.ಟಿ.ಪಿ.ಎಸ್. ಸ್ಥಾವರಕ್ಕೆ ಚಾಲನೆ ನೀಡುವುದರ ಮೂಲಕ ನಾವೇ ವಿದ್ಯುತ್ ಉತ್ಪಾದಿಸಿ ಅಗತ್ಯವಿರುವ ರಾಜ್ಯಗಳಿಗೆ ಸರಬರಾಜು ಮಾಡಬಹುದು. ಹಾಗೂ ಆ ಭಾಗದ ಯುವಕರಿಗೆ ಉದ್ಯೋಗ ನೀಡಬಹುದು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಜಿ.ಎಸ್.ಟಿ., ನೋಟ್ ಬ್ಯಾನ್ ಮತ್ತು ಕೊರೋನ ಸಂಕಷ್ಟಗಳಿಂದ ನಲುಗಿರುವ ಕೈಗಾರಿಕೆಗಳು, ವಾಣಿಜ್ಯೋದ್ಯಮಗಳು ಮತ್ತು ಜನರ ಮೇಲೆ ವಿದ್ಯುತ್ ಏರಿಕೆಯ ಬರೆಯನ್ನು ಹಾಕದೇ ಕಷ್ಟಕಾಲದಲ್ಲಿ ತೆರಿಗೆಯ ಹೊರೆಯನ್ನು ಇಳಿಸಿ, ಆರ್ಥಿಕತೆಗೆ ಚೈತನ್ಯ ನೀಡಬೇಕೆಂದು ಆಗ್ರಹಿಸುತ್ತೇನೆ. ಈ ಕುರಿತಂತೆ ಅಗತ್ಯ ಬಿದ್ದರೆ ವಿದ್ಯುಚ್ಛಕ್ತಿ ದರಗಳನ್ನು ಹೇಗೆ ಕಡಿಮೆ ಮಾಡಬಹುದು ಹಾಗೂ ಸಂಸ್ಥೆಗಳನ್ನು ಹೇಗೆ ಲಾಭದಾಯಕವಾಗಿ ನಡೆಸಬಹುದೆಂದು ಸಲಹೆಗಳನ್ನು ನೀಡಲು ಸಿದ್ದನಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.







