ಸಂಪತ್ ರಾಜ್ ಬಂಧಿಸಲು ಕ್ರಮ ಕೈಗೊಳ್ಳಿ: ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ
ಡಿಜೆ ಹಳ್ಳಿ ಗಲಭೆ ಪ್ರಕರಣ
![ಸಂಪತ್ ರಾಜ್ ಬಂಧಿಸಲು ಕ್ರಮ ಕೈಗೊಳ್ಳಿ: ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ಸಂಪತ್ ರಾಜ್ ಬಂಧಿಸಲು ಕ್ರಮ ಕೈಗೊಳ್ಳಿ: ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ](https://www.varthabharati.in/sites/default/files/images/articles/2020/11/13/267295-1605281906.jpg)
ಬೆಂಗಳೂರು, ನ.13: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿ ತಲೆಮರೆಸಿಕೊಂಡಿರುವ ಮಾಜಿ ಮೇಯರ್ ಆರ್.ಸಂಪತ್ ರಾಜ್ ಬಂಧಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಹೈಕೋರ್ಟ್ ಪೊಲೀಸರಿಗೆ ನಿರ್ದೇಶಿಸಿದೆ.
ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲು ಕೋರಿ ಸಲ್ಲಿಸಿದ್ದ 4 ಪ್ರತ್ಯೇಕ ಪಿಐಎಲ್ಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ತಲೆಮರೆಸಿಕೊಂಡಿರುವ ವಿಚಾರವನ್ನು ಸರಕಾರಿ ವಕೀಲರು ಪೀಠದ ಗಮನಕ್ಕೆ ತಂದರು. ಹಾಗೆಯೇ ವಿಚಾರಣಾ ನ್ಯಾಯಾಲಯ ಆರೋಪಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿರುವುದನ್ನು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಆರೋಪಿ ಸಂಪತ್ ರಾಜ್ನನ್ನು ಪತ್ತೆ ಹಚ್ಚಿ ಬಂಧಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಜರುಗಿಸುವಂತೆ ಪೊಲೀಸರಿಗೆ ನಿರ್ದೇಶಿಸಿತು. ಅಲ್ಲದೆ ಮುಂದಿನ ವಿಚಾರಣೆ ವೇಳೆ ತನಿಖಾ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚಿಸಿತು.
ಇದೇ ವೇಳೆ ಕ್ಲೇಮ್ ಕಮಿಷನರ್ ಗೆ ನೀಡಿರುವ ಸವಲತ್ತುಗಳ ಕುರಿತು ಮಾಹಿತಿ ಪಡೆದುಕೊಂಡ ಪೀಠ, ಕ್ಲೇಮ್ ಕಮಿಷನರ್ ಗೆ ಅಗತ್ಯವಿರುವ ಕಾರು ಹಾಗೂ ಇನ್ನಿತರ ಸಿಬ್ಬಂದಿಗಳನ್ನು ಕೂಡಲೇ ಒದಗಿಸುವಂತೆ ಸರಕಾರಕ್ಕೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.