ಪತ್ನಿಗೆ ಗುಂಡು ಹಾರಿಸಿ ಕೊಲೆಗೈದ ಪತಿ

ಬೆಂಗಳೂರು, ನ.16: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಗುಂಡಿಟ್ಟು ಕೊಲೆ ಮಾಡಿದ ಪತಿಯು ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಬಸವೇಶ್ವರನಗರದ ಸುಮಿತ್ರಾ ಕೊಲೆಯಾದ ಮಹಿಳೆ. ಅವರ ಪತಿ ಕಾಳಪ್ಪ ಆತ್ಮಹತ್ಯೆ ಯತ್ನಿಸಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕಾಗಿ ದಂಪತಿಗಳ ಮಧ್ಯೆ ಜಗಳ ನಡೆದಿದೆ. ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಕಾಳಪ್ಪ ಮನೆಯಲ್ಲಿದ್ದ ಸಿಂಗಲ್ ಬ್ಯಾರಲ್ ಗನ್ನಿಂದ ಹೆಂಡತಿಯನ್ನು ಗುಂಡಿಟ್ಟು ಕೊಂದಿದ್ದಾನೆ. ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಗುಂಡಿನ ಸದ್ದ ಕೇಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕುಸಿದು ಬಿದ್ದಿದ್ದ ಕಾಳಪ್ಪನನ್ನು ಸ್ಥಳೀಯರ ನೆರವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಳಪ್ಪನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.





