ರಾಜ್ಯದಲ್ಲಿ ಅವಶ್ಯಕತೆಯಿರುವ ಪ್ರತಿಯೊಬ್ಬರಿಗೂ ವಸತಿ ಸೌಕರ್ಯ: ಸಚಿವ ವಿ. ಸೋಮಣ್ಣ

ರಾಯಚೂರು, ನ.17: ರಾಜ್ಯದಲ್ಲಿ 2022ಕ್ಕೆ ಪ್ರತಿಯೊಬ್ಬರಿಗೂ ಸೂರು ನೀಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದಾರೆ. ಹಾಗಾಗಿ, ರಾಜ್ಯದಲ್ಲಿ ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ವಸತಿ ಸೌಕರ್ಯ ಕಲ್ಪಿಸುವುದರಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಅಲ್ಲದೆ 1.17 ಲಕ್ಷ ಮನೆಗಳ ನಿರ್ಮಾಣ ಕೆಲಸ ಆರಂಭವಾಗಿದೆ. ಜೊತೆಗೆ ರಾಜ್ಯಾದ್ಯಂತ 1,910 ಕೋಟಿ ರೂ. ವಸತಿ ಯೋಜನೆ ಫಲಾನುಭವಿಗಳ ಖಾತೆಗೆ ಪಾವತಿಸಲಾಗಿದೆ. ನಗರ ಮತ್ತು ಪಟ್ಟಣ ಪ್ರದೇಶದಲ್ಲಿ 43,000 ಮನೆ ನಿರ್ಮಾಣಕ್ಕೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ 2,300 ಮನೆಗಳ ನಿರ್ಮಾಣ ಕೆಲಸ ಆರಂಭಿಸಲಾಗಿದೆ. ಬೆಂಗಳೂರಲ್ಲಿ 1 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಹಾಗೆಯೇ ರಾಜ್ಯಾದ್ಯಂತ ವಸತಿ ಯೋಜನೆಗಳಿಗೆ 10 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.





