ನ. 21: ಬ್ಯಾರಿ ಭಾಷಾ ದಿನಾಚರಣೆ
ಮಂಗಳೂರು, ನ.19: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ವತಿಯಿಂದ ನ.21ರಂದು 11ಕ್ಕೆ ಬ್ಯಾರಿ ಭಾಷಾ ದಿನಾಚರಣೆಯನ್ನು ಮಂಗಳೂರು ತಾಪಂ ಹೊಸ ಕಟ್ಟಡದ 3ನೇ ಮಹಡಿಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಎಂ.ಬಿ.ಅಬ್ದುಲ್ ರಹ್ಮಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ವಹಿಸಲಿರುವರು. ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ‘ಬ್ಯಾರಿ-ಕನ್ನಡ-ಇಂಗ್ಲಿಷ್-ಹಿಂದಿ-ರೋಮನ್-ಐಪಿ ಲಿಪಿ’ಯನ್ನೊಳಗೊಂಡ ಶಬ್ಧಕೋಶವನ್ನು ಬಿಡುಗಡೆ ಮಾಡಲಿದ್ದಾರೆ.
ಶಬ್ಧಕೋಶ ಕೃತಿಯ ಮಾರ್ಗದರ್ಶಕರಿಗೆ ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಕರಂಬಾರ್ ಮುಹಮ್ಮದ್ ಸನ್ಮಾನ ಮಾಡಲಿರುವರು. ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಎಸ್.ಬಿ. ಅಪ್ಪಾಜಿ ಗೌಡ, ದ.ಕ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸ.ಪ.ಪೂ. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಬ್ಯಾರಿ ಭಾಷಾ ದಿನಾಚರಣೆಯ ಬಗ್ಗೆ ಉಪನ್ಯಾಸ ಮಾಡಲಿರುವರು ಎಂದು ರಿಜಿಸ್ಟ್ರಾರ್ ಪೂರ್ಣಿಮಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







