ಹಳಬರು, ಹೊಸಬರು ಎಂಬ ಭೇದವಿಲ್ಲದೆ ಪಕ್ಷಕ್ಕೆ ಶಕ್ತಿ ತುಂಬಿ: ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು, ಡಿ.10: ಹಳಬರು, ಹೊಸಬರು ಎಂಬ ವ್ಯತ್ಯಾಸವಿಲ್ಲದೆ ಎಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ್ ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಕಿತ್ತೂರಿನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಾಬಸಾಬ್ ಪಾಟೀಲ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಅವರು ಮಾತನಾಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ್ ಈಗಾಗಲೇ ನನ್ನನ್ನು, ನಮ್ಮ ಶಾಸಕಾಂಗ ಪಕ್ಷದ ನಾಯಕರು ಹಾಗೂ ಕಾರ್ಯಾಧ್ಯಕ್ಷರನ್ನು ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ನಮ್ಮ ಸ್ಥಳೀಯ ನಾಯಕರು ಇವರ ಸೇರ್ಪಡೆಯಿಂದ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದು ಸಲಹೆ ನೀಡಿದರು. ಅವರು ಯಾವುದೇ ಷರತ್ತು ಇಲ್ಲದೇ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ಜತೆಗೆ ಕಿತ್ತೂರಿನ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ 2018ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಬಾಬಸಾಬ್ ಪಾಟೀಲ್ ಅವರು ಹಾಗೂ ಅವರ ಬೆಂಬಲಿಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ನಾಯಕರನ್ನು ಇಂದು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ. ಇವರ ಪಕ್ಷ ಸೇರ್ಪಡೆಗೆ ಜಿಲ್ಲಾ ಘಟಕ ಶಿಫಾರಸ್ಸು ಮಾಡಿತ್ತು. ಈ ಬಗ್ಗೆ ನಮ್ಮ ನಾಯಕರ ಜತೆ ಚರ್ಚೆ ನಡೆಸಿದ್ದೆ ಎಂದು ಅವರು ತಿಳಿಸಿದರು.
ಸೋಮಣ್ಣ ಹಾಗೂ ಬಾಬಸಾಬ್ ಮತ್ತು ಅವರ ಬೆಂಬಲಿಗರನ್ನು ನಾನು ಪಕ್ಷದ ಎಲ್ಲ ನಾಯಕರ ಪರವಾಗಿ ಸ್ವಾಗತಿಸುತ್ತೇನೆ. ಈ ಸಂದರ್ಭದಲ್ಲಿ ನಾನು ಒಂದು ವಿಚಾರ ಸ್ಪಷ್ಟಪಡಿಸುತ್ತೇನೆ. ಪಕ್ಷದಲ್ಲಿ ನಾನಾಗಲಿ, ಶಾಸಕಾಂಗ ಪಕ್ಷದ ನಾಯಕರಾಗಲಿ, ವೇದಿಕೆ ಮೇಲೆ ಕೂತಿರುವ ನಾಯಕರಾಗಲಿ ಯಾರು ಕೂಡ ಟಿಕೆಟ್ ನೀಡುವುದಿಲ್ಲ. ಅದನ್ನು ನೀಡುವುದು ನಮ್ಮ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತ್ರ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.
ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ, ಪಕ್ಷ ಪೂಜೆ ಮಾಡಬೇಕು. ಹೊಸಬರು, ಹಳಬರು ಎನ್ನದೆ ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗಬೇಕು. ನಮ್ಮ ಪರಾಜಿತ ಅಭ್ಯರ್ಥಿಗಳ ಜತೆ ಸೇರಿ ಶಿಸ್ತಿನಿಂದ ಕೆಲಸ ಮಾಡಬೇಕೆಂದು ಮನವಿ ಮಾಡುತ್ತೇನೆ. ಪಕ್ಷಕ್ಕೆ ಬಲ ತುಂಬುವವರು, ತಾಳ್ಮೆ ಇರುವವರಿಗೆ ಖಂಡಿತವಾಗಿ ಫಲ ಸಿಗಲಿದೆ. ಸ್ಥಳೀಯ ಸಂಸ್ಥೆ ಹಾಗೂ ಮುಂಬರುವ ಚುನಾವಣೆಯಲ್ಲಿ ಹೇಗೆ ಕೆಲಸ ಮಾಡುತ್ತೀರಿ ಎಂಬುದು ಮುಖ್ಯವಾಗುತ್ತದೆ ಎಂದು ಅವರು ಹೇಳಿದರು.
ಜಾತಿ, ಧರ್ಮ ಆಧಾರದ ಮೇಲೆ ಶಾಸನ: ತಾವೆಲ್ಲರೂ ರಾಜ್ಯ ರಾಜಕಾರಣ ಗಮನಿಸುತ್ತಿದ್ದೀರಿ. ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹೊಸ ರಾಜಕೀಯ ರೂಪ ಕೊಡಲು ಮತ್ತೆ ಶಾಸನ ರೂಪದಲ್ಲಿ ತಂದಿದ್ದಾರೆ. ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡದೇ ಜಾರಿಗೆ ತರಲಾಗಿದೆ. ಬಿಜೆಪಿಯವರು ಜಾತಿ, ಧರ್ಮದ ಆಧಾರದ ಮೇಲೆ ಈ ಶಾಸನ ತರುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ವಿಧೇಯಕದಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದು ನಾವು ಹೇಳುತ್ತಿದ್ದೇವೆ. ದನ, ಕರುಗಳನ್ನು ಸಾಕಿ ಬದುಕುತ್ತಿರುವವರಿಗೆ ಈ ಶಾಸನದಿಂದ ಮಾರಕವಾಗಲಿದೆ ಎಂದು ಸದನದಲ್ಲಿ ಪ್ರತಿಭಟಿಸಲು ನಮಗೆ ಅವಕಾಶ ಸಿಗಲಿಲ್ಲ. ಇದಾದ ನಂತರ ನಮ್ಮ ಶಾಸಕರು, ರೈತರು ಪ್ರತಿಭಟನೆ ಮಾಡುತ್ತಿರುವ ಫ್ರೀಡಂ ಪಾರ್ಕ್ಗೆ ಹೋಗಿ ಅವರ ಜತೆ ನಿಂತಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಇನ್ನಿತರರ ಮುಖಂಡರು ಉಪಸ್ಥಿತರಿದ್ದರು.







