ಮಗುವಿನ ಹಕ್ಕು ಉಲ್ಲಂಘನೆಯಾಗದಿರಲಿ: ಡಿ.ಶಂಕರಪ್ಪ

ಮಂಗಳೂರು, ಡಿ.10: ಯಾವುದೇ ಮಗುವಿನ ಹಕ್ಕುಗಳು ಉಲ್ಲಂಘನೆಯಾದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಿ.ಶಂಕರಪ್ಪ ತಿಳಿಸಿದ್ದಾರೆ.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮಕ್ಕಳ ಹಕ್ಕು ಮತ್ತು ರಕ್ಷಣಾ ಕಾಯ್ದೆ ಅನುಷ್ಠಾನಕ್ಕೆ ತರುವ ಪ್ರಾಧಿಕಾರ ಮತ್ತು ಇಲಾಖೆಗಳ ಪಾತ್ರದ ಸಂವಾದ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗಿದೆಂದು ಸಾರ್ವಜನಿಕರಿಗೆ ತಿಳಿದಾಗ ಯಾವುದೇ ಹಿಂಜರಿಕೆ ಪಡದೇ ಮಕ್ಕಳ ಸಹಾಯವಾಣಿ-1098 ತಕ್ಷಣ ಕರೆ ಮಾಡಿ ಮಾಹಿತಿ ನೀಡಿದರೆ ಮಗುವಿನ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟಲು ಸಾಧ್ಯ ಎಂದರು.
ಹೆಣ್ಣು ಮಗುವಿಗೆ ಬಾಲ್ಯ ವಿವಾಹ ನಡೆದಾಗ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಸಕ್ರಿಯಯಾಗಿ ಕಾರ್ಯನಿರ್ವಹಿಸಬೇಕು. ಮಗುವಿನ ರಕ್ಷಣೆ ಮತ್ತು ಸೂಕ್ತ ಪುನರ್ ವಸತಿ ಕಲ್ಪಿಸಿ ಮಗುವನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಇಲಾಖೆಯ ಜವಾಬ್ದಾರಿ. ಯಾವುದೇ ಬಾಲ್ಯವಿವಾಹ ನಡೆದಾಗ ಪ್ರಥಮ ವರ್ತಮಾನ ವರದಿ ದಾಖಲಿಸಲು ಇಲಾಖಾಧಿಕಾರಿಗಳು ಹಿಂದೇಟು ಹಾಕಬಾರದು ಎಂದು ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಾಪ ಭೋವಿ, ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಶೈಲಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗಟ್ರೂಡ್ ವೇಗಸ್, ಮಹಿಳಾ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕಿ ರೇವತಿ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಸ್ವಾಗತಿಸಿದರು. ನಗರ ವಲಯದ ಮೇಲ್ವಿಚಾರಕಿ ಸುಧಾ ಕಾರ್ಯಕ್ರಮ ನಿರೂಪಿಸಿದರು.







