ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ಬೆಂಗಳೂರು, ಡಿ.18: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವಂತೆ ರಾಜ್ಯ ಸರಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶಿಸಿದ್ದ ಹೈಕೋರ್ಟ್ ತೀರ್ಪಿಗೆ ಶುಕ್ರವಾರ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಆದೇಶಿಸಿ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಬೋಬ್ಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.
ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಚುನಾವಣಾ ಆಯೋಗ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು 2021ರ ಫೆ.5ಕ್ಕೆ ಮುಂದೂಡಿತು. ಇದೇ ವೇಳೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಮುಂದಿನ ಆದೇಶದವರೆಗೆ ತಡೆಯಾಜ್ಞೆ ನೀಡಿ ಆದೇಶಿಸಿತು.
ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಕಾಂಗ್ರೆಸ್ ಪಕ್ಷದ ಪಾಲಿಕೆ ಮಾಜಿ ಸದಸ್ಯ ಎಂ. ಶಿವರಾಜು ಹಾಗೂ ರಾಜ್ಯ ಚುನಾವಣಾ ಆಯೋಗ ಪ್ರತ್ಯೇಕವಾಗಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಪಾಲಿಕೆಗೆ ಚುನಾವಣೆ ನಡೆಸಲು ಡಿ.4ರಂದು ಆದೇಶಿಸಿತ್ತು.
ಹೈಕೋರ್ಟ್ ತನ್ನ ತೀರ್ಪಿನಲ್ಲಿ, ರಾಜ್ಯ ಸರ್ಕಾರ ಪಾಲಿಕೆಯನ್ನು ಈಗಿರುವ 198 ವಾರ್ಡ್ಗಳಿಂದ 243 ವಾರ್ಡ್ಗಳಿಗೆ ಹೆಚ್ಚಿಸಲು ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮ ಸರಿ ಇದೆಯಾದರೂ, ಅದು ಈ ಚುನಾವಣೆಗೆ ಅನ್ವಯಿಸುವುದಿಲ್ಲ. ಚುನಾವಣೆಗೆ ಸಿದ್ಧತೆಗಳನ್ನು ಆರಂಭಿಸಿದ ಬಳಿಕ ಸರಕಾರ ಕಾಯ್ದೆಗೆ ತಂದಿರುವ ತಿದ್ದುಪಡಿ ತಂದಿದೆ. ಹೀಗಾಗಿ ಹೊಸ ಕಾಯ್ದೆಯು ಈ ಚುನಾವಣೆಗೆ ಅನ್ವಯಿಸುವುದಿಲ್ಲ ಹಾಗೂ ಅದರ ಆಧಾರದಲ್ಲಿ ಚುನಾವಣೆ ಮುಂದೂಡಲು ಬರುವುದಿಲ್ಲ. ಆದ್ದರಿಂದ ಪಾಲಿಕೆಗೆ ಸಂವಿಧಾನದ ವಿಧಿ 243(ಯು) ಪ್ರಕಾರ ಚುನಾವಣೆ ನಡೆಸಬೇಕು ಎಂದು ತೀರ್ಪು ನೀಡಿತ್ತು.







