ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಿ: ಉಪ ಲೋಕಾಯುಕ್ತ ಬಿ.ಎಸ್.ಪಾಟೀಲ್
![ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಿ: ಉಪ ಲೋಕಾಯುಕ್ತ ಬಿ.ಎಸ್.ಪಾಟೀಲ್ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಿ: ಉಪ ಲೋಕಾಯುಕ್ತ ಬಿ.ಎಸ್.ಪಾಟೀಲ್](https://www.varthabharati.in/sites/default/files/images/articles/2020/12/19/271818-1608386779.jpg)
ಉಡುಪಿ, ಡಿ.19: ಎಲ್ಲಾ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಅವರು ಕೋರುವ ಸೇವೆಗಳನ್ನು ವಿಳಂಬಕ್ಕೆ ಆಸ್ಪದ ನೀಡದೇ ಸೂಕ್ತ ಸಮಯದಲ್ಲಿ ಒದಗಿಸುವ ಮೂಲಕ ಆಡಳಿತ ಸುಧಾರಣೆಯಲ್ಲಿ ಪ್ರಗತಿ ಸಾಧಿಸುವುದರ ಜೊತೆಗೆ ಪಾರದರ್ಶಕತೆಯನ್ನು ತರಲು ಎಲ್ಲಾ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಉಪ ಲೋಕಾಯುಕ್ತ, ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದ್ದಾರೆ.
ಶನಿವಾರ ಮಣಿಪಾಲದ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯದ ಲೋಕಾಯುಕ್ತಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಬಾಕಿ ಇರುವ ಪ್ರಕರಣಗಳ ಪರಿಶೀಲನೆ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಸಾರ್ವಜನಿಕರ ಕಾರ್ಯಗಳನ್ನು ಶೀಘ್ರದಲ್ಲಿ ಮಾಡಿಕೊಡಬೇಕು. ಅರ್ಜಿಗಳ ವಿಲೇವಾರಿಯಲ್ಲಿ ಅನಗತ್ಯ ವಿಳಂಬ ಮಾಡಬಾರದು. ಸೂಕ್ತ ಕಾರಣಗಳಿಲ್ಲದೆ ಅರ್ಜಿಗಳನ್ನು ತಿರಸ್ಕರಿಸಬೇಡಿ. ಅರ್ಹ ವ್ಯಕ್ತಿಗಳಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಅನರ್ಹರಿಗೆ ಮಂಜೂರು ಮಾಡಬೇಡಿ. ಸಾರ್ವಜನಿಕ ಆಸ್ತಿಯ ರಕ್ಷಣೆ ಮತ್ತು ಅದರ ಬೆಳವಣಿಗೆಗೆ ಕಾರ್ಯ ನಿರ್ವಹಿಸಿ. ಉತ್ತಮವಾಗಿ ಕಾರ್ಯನಿರ್ವಹಿಸುವ ನೌಕರರನ್ನು ಪ್ರೋತ್ಸಾಹಿಸಿ. ಕರ್ತವ್ಯದಲ್ಲಿ ದಕ್ಷತೆಯನ್ನು ರೂಢಿಸಿಕೊಳ್ಳುವಂತೆ ನ್ಯಾ. ಬಿ.ಎಸ್. ಪಾಟೀಲ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಕೆರೆ, ರಸ್ತೆ ಅತಿಕ್ರಮಣ ಪ್ರಕರಣಗಳನ್ನು ಗುರುತಿಸಿ, ಕೂಡಲೇ ಅವುಗಳನ್ನು ವಿಲೇವಾರಿ ಮಾಡಿ. ತಮ್ಮ ಕಚೇರಿಗಳಲ್ಲಿ ಇಂತಹ ಪ್ರಕರಣಗಳಿದ್ದಲ್ಲಿ ಲೋಕಾಯುಕ್ತ ಕಚೇರಿಗೆ ವಿವರವಾದ ಮಾಹಿತಿ ಮತ್ತು ಛಾಯಾಚಿತ್ರಗಳೊಂದಿಗೆ ಫೆಬ್ರವರಿ ಅಂತ್ಯದೊಳಗೆ ಇಂತಹ ಪ್ರಕರಣಗಳ ವಿವರಗಳನ್ನು ನೀಡುವಂತೆ ಸೂಚಿಸಿದ ಉಪ ಲೋಕಾಯುಕ್ತರು, ನಗರ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಟ್ಟಡ ಮನೆಗಳ ನಿರ್ಮಾಣಕ್ಕೆ ಅನುಮತಿ ನೀಡುವ ಸಂದರ್ಭದಲ್ಲಿ ವಿಧಿಸಲಾಗುವ ಷರತ್ತುಗಳ ಪಾಲನೆಯಾಗುತ್ತಿರುವ ಕುರಿತು ಪರಿಶೀಲಿಸಿ. ನಿರ್ಮಾಣ ಹಂತದಲ್ಲೇ ಪರಿಶೀಲನೆ ನಡೆಸಿ ನೋಟಿಸ್ ನೀಡಿ. ಭೂಸ್ವಾಧೀನ ಸಂದರ್ಭದಲ್ಲಿ ಎಲ್ಲಾ ರೀತಿಯ ನಿಯಮಗಳನ್ನು ಅನುಸರಿಸಿ. ಸಂಬಂಧಪಟ್ಟ ವ್ಯಕ್ತಿಗೆ ಸೂಕ್ತ ಪರಿಹಾರ ವಿತರಿಸುವಂತೆ ಸೂಚನೆ ನೀಡಿದರು.
ಗ್ರಾಪಂಗಳ ಪಿಡಿಓ, ಕಾರ್ಯದರ್ಶಿಗಳು ಆಡಿಟ್ ಅಕ್ಷೇಪಣೆಗಳನ್ನು ಪಾಲಿಸ ದಿರುವ ಕುರಿತು ಸಾಕಷ್ಟು ದೂರುಗಳು ದಾಖಲಾಗಿದ್ದು, ಆಡಿಟ್ ವರದಿಯಲ್ಲಿ ಸ್ಪಷ್ಟವಾಗಿ ನಷ್ಟದ ಬಾಬ್ತು ವಸೂಲಿ ಮಾಡುವಂತೆ ಸೂಚನೆ ನೀಡಿದ್ದರೂ ಸಹ ವಸೂಲಾತಿ ನಡೆಯುತ್ತಿಲ್ಲ. ಎಲ್ಲಾ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಉಪ ಲೋಕಾಯುಕ್ತರು ಸೂಚಿಸಿದರು.
ಉಡುಪಿ ಜಿಲ್ಲೆಯಲ್ಲಿ ಪ್ರತೀ ಶನಿವಾರ, ಗ್ರಾಪಂಗಳಲ್ಲಿ ಬಾಕಿ ಇರುವ ಆಡಿಟ್ ಆಕ್ಷೇಪಣೆಗಳ ಕುರಿತು, ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಪಂ ಮೂಲಕ ವಿಚಾರಣೆ ನಡೆಸಲಾಗುತ್ತಿದ್ದು, ಸಂಬಂದಪಟ್ಟ ಪಿಡಿಓ ಹಾಗೂ ಕಾರ್ಯದರ್ಶಿಗಳಿಂದ ನಷ್ಟದ ಬಾಬ್ತು ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ತಮ್ಮ ಸೂಚನೆಯಂತೆ ಇನ್ನು ಮುಂದೆ ಇದಕ್ಕೆ ಮತ್ತಷ್ಟು ವೇಗ ನೀಡಲಾಗುವುದು ಎಂದು ಜಿಪಂ ಸಿಇಓ ಡಾ. ನವೀನ್ ಭಟ್ ತಿಳಿಸಿದರು.
ನೆರೆಯಿಂದ ಮನೆ ಹಾನಿಯಾದವರಿಗೆ ಪರಿಹಾರ ವಿತರಣೆ ಸಂದರ್ಭದಲ್ಲಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ, ಸಮರ್ಪಕವಾಗಿ ಪರಿಹಾರ ವಿತರಿಸಿ. ವಿಕೋಪ ಸಂದರ್ದಲ್ಲಿ ಹಾನಿಯಾದ ಜಿಲ್ಲೆಯ ಕಿಂಡಿ ಅಣೆಕಟ್ಟುಗಳ ವಿವರ, ಅವುಗಳ ಛಾಯಾಚಿತ್ರಗಳು, ಅಂದಾಜು ವೆಚ್ಚ ಮತ್ತು ದುರಸ್ತಿಗೆ ಬಿಡುಗಡೆಯಾದ ಅನುದಾನ ಮತ್ತು ಕೈಗೊಂಡ ದುರಸ್ತಿ ಕಾರ್ಯಗಳ ಕುರಿತು ಸಂಪೂರ್ಣ ವಿವರಗಳನ್ನು ಲೋಕಾಯುಕತಿ ಕಚೇರಿಗೆ ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಉಪಲೋಕಾಯುಕ್ತರು ತಿಳಿಸಿದರು.
ಜಿಲ್ಲೆಯಲ್ಲಿ ಸೆಪ್ಟಂಬರ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ 898 ಮನೆಗಳಿಗೆ ಹಾನಿಯಾಗಿದ್ದು, 3666 ಸಂತ್ರಸ್ಥರಿಗೆ ಅಗತ್ಯ ಸಾಮಗ್ರಿ ಖರೀದಿಗೆ ತಲಾ 10,000 ರೂ ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. 393.89 ಲಕ್ಷ ರೂ.ಗಳ ಮನೆ ನಷ್ಟದ ವರದಿಯನ್ನು ಸಲ್ಲಿಸಲಾಗಿದ್ದು, ಈಗಾಗಲೇ 104 ಪ್ರಕರಣಗಳಲ್ಲಿ 62.23 ಲಕ್ಷ ರೂ ಅನುದಾನ ನೇರವಾಗಿ ಫಲಾನುಭವಿ ಖಾತೆಗೆ ಜಮೆ ಆಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.
ಜಿಲ್ಲೆ ಕಂದಾಯ ಸೇವೆಗಳನ್ನು ನೀಡುವಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿರುವುದನ್ನು, ಕೋವಿಡ್-19 ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು, ಪಾವತಿ ಖಾತೆ ಅದಾಲತ್ ನಡೆಸಿರುವ ಬಗ್ಗೆ ಮತ್ತು ಮನೆ ಬಾಗಿಲಿಗೆ ತೆರಳಿ 4000 ಮಂದಿಗೆ ಪಿಂಚಣಿ ಸೌಲಭ್ಯ ಒದಗಿಸಿರುವುದನ್ನು ತಿಳಿದ ನ್ಯಾ. ಬಿ.ಎಸ್.ಪಾಟೀಲ್, ಈ ಕಾರ್ಯಗಳು ಇಡೀ ರಾಜ್ಯಕ್ಕೆ ಮಾದರಿಯಾಗಿವೆ ಎಂದು ಶ್ಲಾಘಿಸಿದರು.
ಉಡುಪಿ ಜಿಲ್ಲೆಯಲ್ಲಿ ಯುವ ಅಧಿಕಾರಿಗಳ ಸಂಖ್ಯೆ ಹೆಚ್ಚಿದ್ದು, ಸರಕಾರ ನೀಡಿರುವ ಅಧಿಕಾರದಿಂದ, ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸಿ. ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು. ಎಲ್ಲಾ ಕಚೇರಿಗಳಲ್ಲಿ ಕಡತಗಳನ್ನು ಸೂಕ್ತ ರೀತಿಯಲ್ಲಿ ಸಿದ್ದಪಡಿಸಿಕೊಂಡಿರಬೇಕು. ಇದರಿಂದ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾದ ಸಂದರ್ಭ ಕಾಲಮಿತಿಯಲ್ಲಿ ವರದಿ ಪಡೆದು ಪ್ರಕರಣ ಇತ್ಯರ್ಥಪಡಿಸಲು ಸಾಧ್ಯವಾಗಲಿದೆ ಎಂದು ಉಪ ಲೋಕಾಯುಕ್ತ ತಿಳಿಸಿದರು.
ಸಭೆಯಲ್ಲಿ ಎಸ್ಪಿವಿಷ್ಣುವರ್ಧನ್, ಮಂಗಳೂರಿನ ಲೋಕಾಯುಕ್ತ ಎಸ್ಪಿ ಕುಮಾರಸ್ವಾಮಿ, ಡಿಎಫ್ಓ ಆಶೀಶ್ ರೆಡ್ಡಿ ಉಪಸ್ಥಿತರಿದ್ದರು.ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ವಂದಿಸಿದರು.
![](https://www.varthabharati.in/sites/default/files/images/galllery/2020/12/19/UD-D19 UPA LOKA1.jpg)