ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು: ಉಡುಪಿ ಡಿಸಿ ಜಗದೀಶ್
![ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು: ಉಡುಪಿ ಡಿಸಿ ಜಗದೀಶ್ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು: ಉಡುಪಿ ಡಿಸಿ ಜಗದೀಶ್](https://www.varthabharati.in/sites/default/files/images/articles/2020/12/19/271839-1608392629.jpg)
ಉಡುಪಿ, ಡಿ.19: ಯುವಜನರು ಪ್ರತಿಯೊಂದು ಚುನಾವಣೆಯಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವುದರ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು. ಯಾವುದೇ ಆಮಿಷಕ್ಕೆ ಒಳಗಾಗದೆ ಉತ್ತಮ ಚಾರಿತ್ರ್ಯವುಳ್ಳ ಅಭ್ಯರ್ಥಿಗಳನ್ನು ಪ್ರತಿನಿಧಿಗಳಾಗಿ ಆಯ್ಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.
ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ವೀಪ್ ಸಮಿತಿ ವತಿಯಿಂದ ರಾಷ್ಟ್ರೀಯ ಮತದಾರ ದಿನಾಚರಣೆ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಹಂತದ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ. ಮಾತನಾಡಿ, ಉಡುಪಿಜಿಲ್ಲೆ ಶೈಕ್ಷಣಿಕವಾಗಿ ಉತ್ತಮ ಸಾಧನೆಯನ್ನು ತೋರುತ್ತಿದೆ. ಎಸೆಸೆಲ್ಸಿ, ಪಿಯುಸಿ ಫಲಿತಾಂಶಗಳಲ್ಲಿ ಶೇ.100ಕ್ಕೆ ಹತ್ತಿರದ ಫಲಿತಾಂಶವನ್ನು ದಾಖಲಿಸುತ್ತಿದೆ. ಅದೇ ರೀತಿ ಚುನಾವಣಾ ಸಂದರ್ಭದಲ್ಲಿ ಮತದಾನದ ಪ್ರಮಾಣದಲ್ಲಿಯೂ ಹೆಚ್ಚಿನ ಪ್ರಮಾಣದ ಮತದಾನ ನಡೆಯಬೇಕು ಎನ್ನುವುದು ಚುನಾವಣಾ ಆಯೋಗದ ಆಶಯವಾಗಿದೆ ಎಂದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರಕಲಾ ಶಿಕ್ಷಕ ರಾಧಾಕೃಷ್ಣ ಉಪಾಧ್ಯಾಯ ಅವರು ಜಿಲ್ಲಾಧಿಕಾರಿ ಹಾಗೂ ಸಿಇಓರ ಹಸ್ತದ ಚಿತ್ರವನ್ನು ಪಡೆದು ಪಕ್ಷಿಯ ಚಿತ್ರ ರಚಿಸಿ ಉದ್ಘಾಟಣೆ ನೆರವೇರಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭಗವಂತ ಕಟ್ಟೀಮನಿ, ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಬಾಲಕೃಷ್ಣ ಉಪಸ್ಥಿತರಿದ್ದರು. ಡಯಟ್ ಉಡುಪಿ ಉಪಪ್ರಾಂಶುಪಾಲ ಅಶೋಕ ಕಾಮತ್ ಕಾರ್ಯಕ್ರಮವನ್ನು ನಿರ್ವಹಿಸಿದರು.