ಖಾಸಗಿ ಶಾಲಾ ಆಡಳಿತ ಮಂಡಳಿ ಜತೆ ಶಾಮೀಲಾದ ಸರಕಾರ: ಸಿದ್ದರಾಮಯ್ಯ ಆರೋಪ

ಬೆಂಗಳೂರು, ಡಿ.20: ರಾಜ್ಯದ ಶಾಲೆಗಳಲ್ಲಿ ತರಗತಿಗಳು ನಡೆಯದೆ ಇದ್ದರೂ ಬೋಧನಾ ಶುಲ್ಕದ ಜೊತೆಯಲ್ಲಿ ಪ್ರಯೋಗಶಾಲೆ, ಲೈಬ್ರೆರಿ ಮತ್ತು ಪಠ್ಯೇತರ ಶುಲ್ಕ ವಸೂಲಿ ಮಾಡಲು ಹೊರಟಿರುವ ಖಾಸಗಿ ಶಾಲೆಗಳು ಸರಕಾರದ ಪೊಳ್ಳು ಬೆದರಿಕೆಗೆ ಜಗ್ಗುತ್ತಿಲ್ಲ. ಸರಕಾರವು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಜೊತೆ ಶಾಮೀಲಾಗಿರುವಂತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಖಾಸಗಿ ಶಾಲೆಗಳ ಮೇಲೆ ಸರಕಾರಕ್ಕೆ ಯಾವ ನಿಯಂತ್ರಣವೂ ಇಲ್ಲ. ತರಗತಿಗಳು ನಡೆಯದೆ ಇದ್ದರೂ ಖಾಸಗಿ ಶಾಲೆಗಳು ಪೋಷಕರಿಂದ ನಿಗದಿತ ಪೂರ್ಣಶುಲ್ಕ ಪಾವತಿಸಲು ಒತ್ತಡ ಹೇರುತ್ತಿವೆ. ಈಗಾಗಲೇ ಖಾಸಗಿ ಶಾಲೆಗಳು ಆನ್ ಲೈನ್ ತರಗತಿಗಳನ್ನು ಕೂಡಾ ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡುತ್ತಿವೆ. ಶಿಕ್ಷಣ ಸಚಿವರು ಕಣ್ಣುಮುಚ್ಚಿಕೊಂಡು ಕೂತಿದ್ದಾರೆ ಎಂದವರು ದೂರಿದ್ದಾರೆ.
ರಾಜ್ಯ ಸರಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಎಲ್ಲರೂ ಬೀದಿಗಿಳಿಯುವಂತಾಗಿದೆ. ಈ ಗೊಂದಲದಿಂದಾಗಿ ಬಹಳ ಮುಖ್ಯವಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ರಾಜ್ಯ ಸರಕಾರ ತಕ್ಷಣ ಸ್ಪಷ್ಟನಿರ್ಧಾರ ಕೈಗೊಂಡು ಈ ಬಿಕ್ಕಟ್ಟನ್ನು ಬಗೆಹರಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ನೇರ ಹೊಣೆಗಾರರು. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
ಶಾಲೆಗಳ ಪುನರಾರಂಭದ ಬಗ್ಗೆ ಸಭೆಗಳ ಮೇಲೆ ಸಭೆಗಳು ನಡೆಯುತ್ತಿವೆ, ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳು ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಪೋಷಕರನ್ನು ಗೊಂದಲಕ್ಕೆ ನೂಕಿದ್ದಾರೆ. ತಕ್ಷಣ ಶಿಕ್ಷಣ ಸಚಿವರು ಖಾಸಗಿ ಶಾಲೆಗಳ ಮಾಲಕರು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆಯನ್ನು ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದವರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.







