ಸಿಎಂ ಭೇಟಿ ಮಾಡಿದ ಎಲ್ಐಸಿ ಅಧಿಕಾರಿಗಳು: 'ಭಾಗ್ಯಲಕ್ಷ್ಮಿ ಯೋಜನೆ' ಎಲ್ಐಸಿ ಮೂಲಕ ಜಾರಿಗೆ ಮನವಿ

ಬೆಂಗಳೂರು, ಡಿ.22: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಭಾಗ್ಯಲಕ್ಷ್ಮಿ ಯೋಜನೆಯಡಿ ಎಲ್ಐಸಿಯವರು ನೀಡಬಹುದಾದ ಅತ್ಯುತ್ತಮ ಕೊಡುಗೆಯ ಕುರಿತು ಪರಿಶೀಲಿಸಿ, ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ತಮ್ಮನ್ನು ಭೇಟಿಯಾದ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಐಸಿಯ ವಲಯ ವ್ಯವಸ್ಥಾಪಕಿ ಮಿನಿ ಇಪೆ ನೇತೃತ್ವದ ಎಲ್ಐಸಿ ಅಧಿಕಾರಿಗಳ ನಿಯೋಗವು ಮುಖ್ಯಮಂತ್ರಿಯನ್ನು ಭೇಟಿಯಾಗಿ ಭಾಗ್ಯಲಕ್ಷ್ಮಿ ಯೋಜನೆಯನ್ನು ಎಲ್ಐಸಿ ಮೂಲಕವೇ ಜಾರಿಗೊಳಿಸುವ ಕುರಿತು ಮತ್ತೊಮ್ಮೆ ಪರಿಶೀಲಿಸುವಂತೆ ಮನವಿ ಮಾಡಿತು.
ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಭಾಗ್ಯಲಕ್ಷ್ಮಿ ಯೋಜನೆಯಡಿ ನೀವು ನೀಡಬಹುದಾದ ಕೊಡುಗೆಗಳ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಪರಿಶೀಲಿಸುವುದಾಗಿ ತಿಳಿಸಿದರು.
ಭಾಗ್ಯಲಕ್ಷ್ಮಿ ಯೋಜನೆಯಡಿ ರಾಜ್ಯ ಸರಕಾರ ಪಾವತಿಸುತ್ತಿರುವ ಪ್ರಿಮಿಯಂ ಮೊತ್ತಕ್ಕೆ 18 ವರ್ಷದ ವೇಳೆಗೆ 1 ಲಕ್ಷ ರೂ. ನೀಡಲು ಎಲ್ಐಸಿಯು ಅಸಹಾಯಕತೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಭಾರತೀಯ ಅಂಚೆಯ ಸುಕನ್ಯಾ ಸಮೃದ್ಧಿ ಮೂಲಕ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.
ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ನಾಗಲಾಂಬಿಕಾದೇವಿ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.







