ಔಷಧಿ ಪಡೆಯುವವರ ಮಾಹಿತಿ ಜಿಲ್ಲಾಡಳಿತಕ್ಕೆ ನೀಡಿ : ಡಿಸಿ ರಾಜೇಂದ್ರ
ಗಡಿಭಾಗ, ವಿದೇಶದಿಂದ ಬಂದವರಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯ

ಮಂಗಳೂರು, ಡಿ.23: ಖಾಸಗಿ, ಸರಕಾರಿ ಆಸ್ಪತ್ರೆ, ಕ್ಲಿನಿಕ್ ಹಾಗೂ ಮೆಡಿಕಲ್ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.
ನಗರದ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕೋವಿಡ್-19 ಲಸಿಕೆಯ ಪೂರ್ವ ತಯಾರಿ ಮತ್ತು 2021 ರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಗೂ ರೂಪಾಂತರಿತ ಹೊಸ ಕೊರೋನ ಸೋಂಕು ಕುರಿತು ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದೇಶಗಳಲ್ಲಿ ಕೋವಿಡ್ ಎರಡನೇ ಅಲೆ ಹಾಗೂ ರೂಪಾಂತರಿತ ಹೊಸ ಕೊರೋನ ಸೋಂಕು ಕಂಡು ಬಂದಿದ್ದು, ಇಲ್ಲಿಗೂ ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಹಾಗೂ ಔಷಧಿ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ, ಕೆಮ್ಮು ಸಂಬಂಧಿತ ರೋಗಕ್ಕೆ ಔಷಧಿ ಪಡೆಯುವವರ ಸಂಪೂರ್ಣ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಇವುಗಳನ್ನು ಕಡ್ಡಾಯವಾಗಿ ಸಂಬಂಧಿಸಿದ ಸಾಫ್ಟ್ವೇರ್ನಲ್ಲಿ ನಮೂದಿಸಲು ಸೂಚಿಸಿದರು.
ಮದುವೆ ಸೇರಿದಂತೆ ಇನ್ನಿತರ ಸಭಾ ಕಾರ್ಯಕ್ರಮಗಳಲ್ಲಿ 200ಕ್ಕಿಂತ ಅಧಿಕ ಹಾಗೂ ಬಯಲು ಪ್ರದೇಶಗಳಲ್ಲಿ ನಡೆಯುವ ಸಮಾರಂಭಗಳಲ್ಲಿ 500ಕ್ಕಿಂತ ಅಧಿಕ ಜನ ಪಾಲ್ಗೊಳ್ಳಬಾರದು. ಒಂದು ವೇಳೆ ಮಿತಿ ಮೀರಿದ ಜನ ಪಾಲ್ಗೊಂಡಿರುವುದು ಗಮನಕ್ಕೆ ಬಂದರೆ ಸಂಬಂಧಪಟ್ಟ ಅಧಿಕಾರಿಗಳು ಮುಖ್ಯಸ್ಥರಿಗೆ 10 ಸಾವಿರ ರೂ. ದಂಡ ವಿಧಿಸಬೇಕು ಎಂದು ಸೂಚಿಸಿದರು.
ಸಾಲುಸಾಲು ರಜೆ ಹಾಗೂ ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳು ಹೆಚ್ಚಾಗಿ ಇರುವುದರಿಂದ ಭಕ್ತರು ಹಾಗೂ ಪ್ರವಾಸಿಗರು ಆಗಮಿಸುವ ಸಾಧ್ಯತೆ ಇದೆ. ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ 65 ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳ ಪ್ರವೇಶ ನಿರ್ಬಂಧಿಸಬೇಕು. ಇದಕ್ಕೆ ಸಂಬಂಧಿಸಿದ ಭಿತ್ತಿಪತ್ರಗಳನ್ನು ದೇವಸ್ಥಾನಗಳ ಆವರಣದಲ್ಲಿ ಪ್ರದರ್ಶಿಸಬೇಕು. ಕಾನೂನುಗಳನ್ನು ಉಲ್ಲಂಘಿಸಿದರೆ ಸಂಬಂಧಪಟ್ಟ ಆಡಳಿತ ಮಂಡಳಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ತಾಲೂಕು ಮಟ್ಟದಲ್ಲಿ ತಹಶೀಲ್ದಾರ್, ತಾಪಂ ಇಒ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಬೇಕು. ಜನಸಾಮಾನ್ಯರೊಂದಿಗೆ ಕೋವಿಡ್ ಸೋಂಕು ತಡೆಯುವ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಮುನ್ನೆಚ್ಚರಿಕಾ ಕ್ರಮಗಳು ಪರಿಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದರು.
ತಾಲೂಕು ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಹೆಚ್ಚು ಮಾಡಬೇಕು. ಖಚಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಟೈನ್ಮೆಂಟ್ ಪ್ರದೇಶಗಳನ್ನು ಗುರುತಿಸು ವುದರ ಜೊತೆಗೆ ಅವರ ಕುಟುಂಬ ವರ್ಗದವರನ್ನು ಹೋಮ್ ಕ್ವಾರಂಟೈನ್ನಲ್ಲಿ ಇರಿಸಿ ನಿಗಾವಹಿಸಬೇಕು ಎಂದರು.
ಅಂಗಡಿ, ಮಾಲ್, ಮಾರುಕಟ್ಟೆಗಳಲ್ಲಿ ಗ್ರಾಹಕರು ಮಾಸ್ಕ್ ಧರಿಸದೆ, ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಇದ್ದರೆ ಅಂತಹ ಸಂದರ್ಭದಲ್ಲಿ ಅಂಗಡಿಯ ಮಾಲಕನಿಗೆ ದಂಡ ವಿಧಿಸಬೇಕು. ಆಶಾ ಕಾರ್ಯಕರ್ತೆಯರು ವಿದೇಶದಿಂದ ಬಂದವರ ಮಾಹಿತಿ ಪಡೆದು ಆರೋಗ್ಯ ಕೇಂದ್ರಕ್ಕೆ ನೀಡಬೇಕು. ಅವರನ್ನು ಕಡ್ಡಾಯವಾಗಿ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚಿಸಿದರು.
ಕೋವಿಡ್-19 ಲಸಿಕೆಯು ಲಭ್ಯತೆ ಅನುಗುಣವಾಗಿ ಹಾಗೂ ಆದ್ಯತೆಯ ಅನುಸಾರ ಮೂರು ಹಂತದಲ್ಲಿ ಲಸಿಕೆ ನೀಡಲಾಗುತ್ತದೆ. ಲಸಿಕೆಯು ನೋಂದಣಿ ಮಾಡಿಕೊಂಡವರಿಗೆ ಪಡೆಯಲು ಅವಕಾಶ ಇರುತ್ತದೆ. ಲಸಿಕೆ ಹಂಚಿಕೆ ಸಂಬಂಧಿಸಿದಂತೆ ತಹಶೀಲ್ದಾರ್ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಜೊತೆಗೆ ಸಿಬ್ಬಂದಿಯನ್ನು ವಿಶೇಷ ತರಬೇತಿ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಯಾವುದೇ ಮಗು ಪೊಲೀಯೋ ಲಸಿಕೆಯಿಂದ ವಂಚಿತರಾಗಬಾರದು. ಪಾಲಿಕೆಯ ವ್ಯಾಪ್ತಿ ಹಾಗೂ ಇನ್ನಿತರ ಪ್ರದೇಶಗಳಲ್ಲಿರುವ ಕಟ್ಟಡ ಕಾರ್ಮಿಕರ ಮಕ್ಕಳು, ವಲಸೆ ಬಂದ ಕುಟುಂಬ, ಕೊಳಚೆ ಪ್ರದೇಶದಲ್ಲಿ ವಾಸವಿರುವ ಮಕ್ಕಳನ್ನು ಗುರುತಿಸಿ ವರದಿ ಯನ್ನು ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪ, ಐಎಎಸ್ ಪ್ರೊಬೇಷನರಿ ಆಫೀಸರ್ ಮೋನಾ ರೋತ್, ಆರ್ಸಿಎಚ್ ಅಧಿಕಾರಿ ಡಾ.ರಾಜೇಶ್, ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಡಾ.ಮಂಜಯ್ಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
49 ವಿದೇಶಿ ಪ್ರಯಾಣಿಕರ ಪರೀಕ್ಷೆ
ಜಿಲ್ಲೆಯ ಜನತೆ ಹೆಚ್ಚು ಆತಂಕಕ್ಕೊಳಗಾಗದೆ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕೊವಿಡ್ ಪರೀಕ್ಷೆ ಮಾಡಬೇಕು. ವಿದೇಶಿ ಪ್ರಯಾಣಿ ಕರು ಕಡ್ಡಾಯವಾಗಿ ಹೋ ಕ್ವಾರಂಟೈನ್ಗೆ ಒಳಗಾಗಿ ಆರ್ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಈಗಾಗಲೇ ಜಿಲ್ಲೆಗೆ ಆಗಮಿಸಿದ 49 ವಿದೇಶಿ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದೆ. ಇದರಲ್ಲಿ 35 ಮಂದಿಯ ವರದಿ ನೆಗೆಟಿವ್ ಬಂದಿದೆ. ಬಾಕಿ ಉಳಿದಿರುವವರ ಪರೀಕ್ಷೆ ಪ್ರಕ್ರಿಯೆಯಲ್ಲಿದೆ ಜಿಲ್ಲಾ ಆರೋಗ್ಯಾದಿಕಾರಿ ರಾಮಚಂದ್ರ ಬಾಯರಿ ತಿಳಿಸಿದ್ದಾರೆ.
ಆರ್ಪಿಸಿಸಿಆರ್ ಪರೀಕ್ಷೆಗೆ 800 ರೂ. ದರ ನಿಗದಿ
ಉದ್ಯೋಗ ನಿಮಿತ್ತ ಕಾಸರಗೋಡು ಸೇರಿದಂತೆ ಇನ್ನಿತರ ಗಡಿಭಾಗದಿಂದ ನಗರಕ್ಕೆ ಆಗಮಿಸುವವರು ಕಡ್ಡಾಯವಾಗಿ 15 ದಿನಕ್ಕೊಮ್ಮೆ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು, ಅವರ ಟೆಸ್ಟ್ ವರದಿಯನ್ನು ಉದ್ಯೋಗ ಸಂಸ್ಥೆ ಪಡೆದು ಜಿಲ್ಲಾ ಆರೋಗ್ಯ ಇಲಾಖೆಗೆ ನೀಡಬೇಕು. ಜೊತೆಗೆ ನಗರದಿಂದ ಕಾಸರಗೋಡಿಗೆ ತೆರಳುವವರು ಕೂಡ ಪರೀಕ್ಷೆಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಈಗಾಗಲೇ ಸರಕಾರವು ಖಾಸಗಿ ಆಸ್ಪತ್ರೆಗಳಲ್ಲಿ ಆರ್ಪಿಸಿಸಿಆರ್ ಪರೀಕ್ಷೆಗೆ 800 ರೂಪಾಯಿ ದರ ನಿಗದಿಪಡಿಸಿದ್ದು, ಹೆಚ್ಚುವರಿ ದರ ಪಡೆದು ಕೊಂಡ ಬಗ್ಗೆ ದೂರು ಬಂದರೆ ಅಂತಹ ಆಸ್ಪತ್ರೆಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.







