ಕೋವಿಡ್: ಮುನ್ನೆಚ್ಚರಿಕೆ ವಹಿಸಲು ಸಚಿವ ಕೋಟ ಮನವಿ
![ಕೋವಿಡ್: ಮುನ್ನೆಚ್ಚರಿಕೆ ವಹಿಸಲು ಸಚಿವ ಕೋಟ ಮನವಿ ಕೋವಿಡ್: ಮುನ್ನೆಚ್ಚರಿಕೆ ವಹಿಸಲು ಸಚಿವ ಕೋಟ ಮನವಿ](https://www.varthabharati.in/sites/default/files/images/articles/2020/12/24/272507-1608826445.jpg)
ಮಂಗಳೂರು, ಡಿ. 24: ಕೋವಿಡ್ನ ಎರಡನೇ ಅಲೆಯ ರೂಪಾಂತರಗೊಂಡ ಸೋಂಕಿನ ಬಗ್ಗೆ ಜನರು ಆತಂಕ ಪಡದೆ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜನತೆಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಎರಡನೇ ಕೋವಿಡ್ ಅಲೆಯ ಆರಂಭಿಕ ಗುರುತಿಸುವಿಕೆ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ 7 ದಿನಗಳ ಸರಾಸರಿ ಬೆಳವಣಿಗೆಯ ಸಂಖ್ಯೆಯನ್ನು ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡುವ ಮೂಲಕ ರಾಜ್ಯ ಆರೋಗ್ಯ ಇಲಾಖೆಯು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.
ಕೋವಿಡ್ ಎರಡನೇ ಅಲೆಯು 2021ರ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಹರಡುವ ಸಾಧ್ಯತೆಯ ಬಗ್ಗೆಯೂ ತಜ್ಞರ ಸಮಿತಿ ಈಗಾಗಲೇ ಮುನ್ನೆಚ್ಚರಿಕೆ ನೀಡಿದೆ. ಜಿಲ್ಲೆಯಲ್ಲಿ ದಿನನಿತ್ಯ 3,350 ಕೋವಿಡ್ ಪರೀಕ್ಷೆಗಳನ್ನು ಫೆಬ್ರವರಿ 2021ರವರೆಗೆ ಮುಂದುವರಿಸಲಿದ್ದು, ಇದರಲ್ಲಿ 2,950 ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
ಸಾಂಕ್ರಾಮಿಕ ರೋಗದ ತಜ್ಞರ ತಂಡ ಎರಡನೆಯ ಅಲೆಯನ್ನು ಶೀಘ್ರವಾಗಿ ಪತ್ತೆಹಚ್ಚಿ ಗುರುತಿಸಲು ಜಿಲ್ಲಾ ವಾರ್ರೂಂ ಅನ್ನು ರಚಿಸುವಂತೆ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೆಶನಾಲಯದ ಆಯುಕ್ತರಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ವಾರ್ರೂಂ ಸೇರಿದಂತೆ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಶಿಕ್ಷಣ ಸಂಸ್ಥೆಗಳ ಎಲ್ಲ ಶಿಕ್ಷಕರು, ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಇತರರು ಆರ್ಟಿಪಿಸಿಆರ್ ಮಾದರಿ ಪರೀಕ್ಷೆಗಳನ್ನು 15 ದಿನಗಳಿಗೊಮ್ಮೆ ಮಾಡಿಸಿಕೊಳ್ಳಬೇಕು. ಆ್ಯಂಬುಲೆನ್ಸ್ ಸೇವೆಗಳು ಸೇರಿದಂತೆ ಸರಕಾರಿ/ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಐಸಿಯು, ಐಸಿಯು ವೆಂಟಿಲೇಟರ್ ಇತ್ಯಾದಿಗಳ ಸಿದ್ಧತೆಯನ್ನು ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ವಿದೇಶದಿಂದ ಡಿ.ರಿಂದ ಜಿಲ್ಲೆಗೆ ಈಗಾಗಲೇ 66 ಜನರು ಆಗಮಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ಸೂಚನೆಯಂತೆ ಎಲ್ಲರನ್ನೂ ಹಚ್ಚಿ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರಲ್ಲಿ ಈಗಾಗಲೇ 41 ಮಂದಿಯ ವರದಿಯು ನೆಗೆಟಿವ್ ಆಗಿದೆ. ಎಲ್ಲರೂ ಹೋಂ ಕ್ವಾರಂಟೈನ್ನಲ್ಲಿ ಇರುತ್ತಾರೆ. ಯಾರು ಸದ್ಯಕ್ಕೆ ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ. ಕೋವಿಡ್ ಬಗ್ಗೆ ವೃಥಾ ಆತಂಕಪಡುವ ಬದಲು ಕಟ್ಟುನಿಟ್ಟಿನ ನಿಯಂತ್ರಣ ಕ್ರಮಕ್ಕೆ ಸರ್ವರೂ ಸಹಕರಿಸಬೇಕು ಎಂದು ಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪರಿಶೀಲಿಸಿಯೇ ಶಾಲೆ ಆರಂಭ: ಕೋಟ
ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್-19ನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದ ನಂತರವೇ ಶಾಲೆಗಳನ್ನು ತೆರೆಯುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಡಿಸೆಂಬರ್/ ಜನವರಿ ತಿಂಗಳಲ್ಲಿ ವೈರಸ್ ವೇಗವಾಗಿ ಹರಡುವ ಸಾಧ್ಯತೆ ಇರುವ ಕಾರಣ ಜಿಲ್ಲೆಯಲ್ಲಿ ನಡೆಯುವ ಉತ್ಸವ, ಧಾರ್ಮಿಕ ಸಭೆ ಸಮಾರಂಭಗಳು, ಸಾಮೂಹಿಕ ಕೂಟಗಳನ್ನು ನಿರ್ಬಂಧಿಸಲಾಗಿದೆ. ಈ ಮೊದಲು ಅನುಮತಿ ಪಡೆದಿದ್ದಲ್ಲಿ ಮದುವೆ ಸಮಾರಂಭಕ್ಕೆ ಕನಿಷ್ಠ 100 ಜನರು, ರಾಜಕೀಯ ಹಾಗೂ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಕನಿಷ್ಠ 200, ಶವ ಸಂಸ್ಕಾರಕ್ಕೆ ಕನಿಷ್ಠ 25 ಜನರು ಮತ್ತು ಉತ್ತರ ಕ್ರಿಯೆಗೆ ಕನಿಷ್ಠ 50 ಜನರು ಸೇರಬಹುದಾಗಿದೆ ಎಂದರು.