ಭೂಗತ ಪಾತಕಿ ರವಿ ಪೂಜಾರಿ ಆಸ್ಪತ್ರೆಗೆ ದಾಖಲು

ಬೆಂಗಳೂರು, ಡಿ.29: ವಿವಿಧ ಗಂಭೀರ ಅಪರಾಧ ಪ್ರಕರಣಗಳ ಆರೋಪದಡಿ ಬಂಧನಕ್ಕೊಳಗಾಗಿರುವ ಭೂಗತ ಲೋಕದ ಪಾತಕಿ ರವಿ ಪೂಜಾರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿರುವ ರವಿ ಪೂಜಾರಿಗೆ ಹರ್ನಿಯಾ ಸಮಸ್ಯೆಯಿದ್ದು, ಹೆಚ್ಚಿನ ಚಿಕಿತ್ಸೆ ನೀಡಬೇಕಾಗಿದೆ ಎಂದು ಜೈಲಾಧಿಕಾರಿಗಳಿಗೆ ವೈದ್ಯರು ವರದಿ ನೀಡಿದ್ದರು. ವೈದ್ಯರ ಸೂಚನೆ ಮೇರೆಗೆ ಮಂಗಳವಾರ ಮಧ್ಯಾಹ್ನ ಪೊಲೀಸ್ ಬಂದೋಬಸ್ತಿನೊಂದಿಗೆ ವಿಕ್ಟೋರಿಯಾ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಎರಡು ದಶಕಗಳ ಕಾಲ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಕಳೆದ ಫೆಬ್ರವರಿಯಲ್ಲಿ ಬಂಧಿಸಿ ನಗರ ಪೊಲೀಸರು ನ್ಯಾಯಾಂಗ ಬಂಧನದಲ್ಲಿಟ್ಟಿದ್ದಾರೆ.
Next Story





