ಜಲಜೀವನ್ ಮಿಷನ್ ಯೋಜನೆಗೆ 143ಕೋಟಿ ರೂ. ವೆಚ್ಚದ ಕಾಮಗಾರಿ: ಉಡುಪಿ ಜಿಪಂ ಸಿಇಓ ಡಾ.ನವೀನ್ ಭಟ್

ಉಡುಪಿ, ಡಿ.31: ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 143 ಕೋಟಿ ರೂ. ಮೊತ್ತದ ಒಟ್ಟು 391 ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾಗುವುದು ಎಂದು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ. ಹೇಳಿದ್ದಾರೆ.
ಗುರುವಾರ ಮಣಿಪಾಲ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಪ್ರತಿಯೊಂದು ಕುಟುಂಬಕ್ಕೂ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆಯಿದ್ದು, ಇದಕ್ಕಾಗಿ ಈ ಮೊದಲು 236 ಕೋಟಿ ರೂ. ವೆಚ್ಚದಲ್ಲಿ 843 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿತ್ತು ಎಂದರು.
ಆದರೆ ವಾರಾಹಿಯಿಂದ ಉಡುಪಿಗೆ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನವಾಗುವ ಹಾಗೂ ಇತರೆ ನೀರು ಸರಬರಾಜು ಯೋಜನೆಗಳು ಅನುಷ್ಠಾನವಾಗುತ್ತಿರುವ ಹಿನ್ನಲೆಯಲ್ಲಿ ಪರಿಷ್ಕೃತ ಯೋಜನೆ ಸಿದ್ಧಪಡಿಸಿದ್ದು, ಇದರಲ್ಲಿ 143 ಕೋಟಿ ರೂ. ವೆಚ್ಚದಲ್ಲಿ 391 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಡಾ. ನವೀನ್ ಭಟ್ ತಿಳಿಸಿದರು.
ಪರಿಷ್ಕೃತ ಯೋಜನೆಯಲ್ಲಿ ಕಾರ್ಕಳ ತಾಲೂಕಿನ 34 ಗ್ರಾಪಂಗಳ 50 ಗ್ರಾಮಗಳಲ್ಲಿ, ಕುಂದಾಪುರ ತಾಲೂಕಿನ 23 ಗ್ರಾಪಂಗಳ 35 ಗ್ರಾಮಗಳಲ್ಲಿ, ಉಡುಪಿ ತಾಲೂಕಿನ 33 ಗ್ರಾಪಂಗಳ 55 ಗ್ರಾಮಗಳು ಸೇರಿದಂತೆ ಒಟ್ಟು 90 ಗ್ರಾಪಂಗಳ 140 ಗ್ರಾಮಗಳಲ್ಲಿ 391 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿವರಿಸಿದರು.
ಸಭೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 382.2 ಕೋಟಿ ರೂ ವೆಚ್ಚದ ಕಾಮಗಾರಿ ಕೈಗೊಳ್ಳಲು, ಎರ್ಲಪಾಡಿ ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರು ಯೋಜನೆಯ 981.20 ಲಕ್ಷ ರೂ ವೆಚ್ಚದ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆಗಳನ್ನು ಅನುಮೋದನೆಗೆ ಸಲ್ಲಿಸಲು ಮತ್ತು ಉಡುಪಿ ತಾಲೂಕಿನ 80 ಬಡಗಬೆಟ್ಟು ಗ್ರಾಪಂಗೆ ಮಂಜೂರಾಗಿರುವ 63.39 ಲಕ್ಷ ಹಾಗೂ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಪಂಗೆ ಮಂಜೂ ರಾಗಿರುವ 67.59 ಲಕ್ಷದ ಎಫ್ಎಸ್ಎಂ ಯೋಜನೆಗಳಿಗೆ ಅಡಳಿತಾತ್ಮಕ ಅನುಮೋದನೆ ನೀಡುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ರಾಜ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.







